ADVERTISEMENT

‘ಮೀಸಲಾತಿ ಹೆಚ್ಚಿಸದಿದ್ದರೆ ಬಿಜೆಪಿಗೆ ಪಾಠ’

ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 16 ಮೇ 2022, 15:32 IST
Last Updated 16 ಮೇ 2022, 15:32 IST

ಚಿಕ್ಕಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಜನಸಂಖ್ಯಾವಾರು ಮೀಸಲಾತಿ ಹೆಚ್ಚಿಸದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಕ್ರಿಯಾ ಸಮಿತಿ ಮುಖಂಡರು ಎಚ್ಚರಿಸಿದರು.

ಸೋಮವಾರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡ ಗವಿರಾಯಪ್ಪ, ಪರಿಶಿಷ್ಟ ಜಾತಿಗೆ ಶೇ 17ರಷ್ಟು ಮತ್ತು ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ಹೆಚ್ಚಿಸಬೇಕು. ಈ ವಿಚಾರವಾಗಿವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 96 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ ಎಂದು ಹೇಳಿದರು.

‘ಈ ಹೋರಾಟವನ್ನುಮನೆ ಮನೆಗಳಿಗೆ, ಗ್ರಾಮಗಳಿಗೆ ಕೊಂಡೊಯ್ಯಲಾಗುವುದು. ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸ್ಪಂದಿಸುತ್ತಿಲ್ಲ.ನಮ್ಮ ಬೇಡಿಕೆ ಈಡೇರಿಸದಿದ್ದರೆ ಪ್ರತಿಫಲ ಅನುಭವಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು. ಆದರೆ ರಾಜ್ಯ ಸರ್ಕಾರ ಈ ವಿಚಾರವಾಗಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಮೀಸಲಾತಿ ಹೆಚ್ಚಳದ ಬಗ್ಗೆ ಈ ಹಿಂದಿ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಅವರು ನೀಡಿದ್ದ ಭರವಸೆ ಈಡೇರಿಸಿಲ್ಲ. ಈ ಕಾರಣದಿಂದ ಸ್ವಾಮೀಜಿ ಧರಣಿ ನಡೆಸುತ್ತಿದ್ದಾರೆ ಎಂದು ಹೇಳಿದರು.

ದಲಿತ ಸಮುದಾಯದ ಮುಖಂಡಸು.ಧಾ.ವೆಂಕಟೇಶ್ ಮಾತನಾಡಿ, ‘ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ನೀಡಬೇಕು. ಪ್ರಸನ್ನಾನಂದಪುರಿ ಸ್ವಾಮೀಜಿ ಈ ವಿಚಾರವಾಗಿ ನಡೆಸುತ್ತಿರುವ ಹೋರಾಟಕ್ಕೆ ಎಲ್ಲರ ಬೆಂಬಲವಿದೆ. ನಾಗಮೋಹನ್‌ ದಾಸ್ ಅವರ ಸಮಿತಿ ವರದಿ ನೀಡಿ ಒಂದೂವರೆ ವರ್ಷ ಆಗಿದೆ. ಆದರೂ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಪ್ರತಿ ಹೋಬಳಿ, ತಾಲ್ಲೂಕು ಕೇಂದ್ರಗಳಲ್ಲಿ ಸಂವಿಧಾನ ಬದ್ಧವಾಗಿ ಮೀಸಲಾತಿ ಹೆಚ್ಚಿಸಬೇಕು ಎಂದುಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರು ಹೋರಾಟ ಮಾಡಬೇಕಾಗಿದೆ. ಆ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.

ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಜಿಲ್ಲಾಅಧ್ಯಕ್ಷಗುಡಿಬಂಡೆ ಮಂಜು ಮಾತನಾಡಿ, ಶೇ 3ರಷ್ಟು ಇರುವ ಜನರಿಗೆ ಶೇ 10ರಷ್ಟು ಮೀಸಲಾತಿ ನೀಡಿದ್ದಾರೆ. ಆ ಜನರು ಮೀಸಲಾತಿಗಾಗಿ ಯಾವುದೇ ಹೋರಾಟ ಮಾಡಲಿಲ್ಲ. ಆದರೆ ಸ್ವಾಮೀಜಿ ಅವರು 96 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಕನಿಷ್ಠ ಮಟ್ಟದಲ್ಲಿ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.

ಇದೇ ರೀತಿಯಲ್ಲಿ ಕಡೆಗಣಿಸಿದರೆ ಸರ್ಕಾರದ ಊಹೆಗೂ ಮೀರಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಸಮಿತಿ ಮುಖಂಡರಾದಬೀಚಗಾನಹಳ್ಳಿ ನರೇಂದ್ರ, ನಗರಸಭೆ ಮಾಜಿ ಸದಸ್ಯ ಕೃಷ್ಣಪ್ಪ, ಗಾ.ನ.ಅಶ್ವತ್ಥ್, ನಾರಾಯಣಸ್ವಾಮಿ, ಪ್ರಕಾಶ್ ಇತರರು ಗೋಷ್ಠಿಯಲ್ಲಿ ಇದ್ದರು.

***

20ರಂದು ಪ್ರತಿಭಟನೆ

ಮೀಸಲಾತಿ ಹೆಚ್ಚಳದ ಸಂಬಂಧ ಶಾಸಕರು ಮತ್ತು ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಆದರೆ ಆ ಸಮಿತಿ ಇಲ್ಲಿಯವರೆಗೂ ಸಭೆ ನಡೆಸಿಲ್ಲ. ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಹೋರಾಟ ಮೇ 20ಕ್ಕೆ 100 ದಿನ ಪೂರೈಸಲಿದೆ. ಅಂದು ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಗುಡಿಬಂಡೆ ಮಂಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.