
ಶಿಡ್ಲಘಟ್ಟ: ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಗುರುವಾರ ಮಾತೃಭೋಜನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಮಾತನಾಡಿ, ‘ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರಹೊಮ್ಮಲು ಶಾಲಾ ಶಿಕ್ಷಕರೊಂದಿಗೆ ಪೋಷಕರ ಸಹಕಾರವೂ ಅಗತ್ಯ’ ಎಂದು ಹೇಳಿದರು.
ಮಕ್ಕಳಿಗೆ ಉತ್ತಮವಾದ ವಾತಾವರಣ ಕಲ್ಪಿಸದಿದ್ದರೆ, ಅವರು ಪರಿಪಕ್ವವಾಗಿ ಬೆಳೆಯಲು ಸಾಧ್ಯವಿಲ್ಲ. ಮಕ್ಕಳಿಗೆ ಆದರ್ಶಮಯವಾದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸುವ ಜವಾಬ್ದಾರಿ ತಾಯಿಯದ್ದಾಗಿರುತ್ತದೆ. ಮನೆಯೇ ಮೊದಲ ಪಾಠಶಾಲೆ ಎಂಬ ಹಿರಿಯರ ಮಾತಿನಂತೆ ಮಗುವಿನ ಶಿಕ್ಷಣ ಮನೆಯಿಂದಲೇ ಆರಂಭವಾಗುತ್ತದೆ. ಮಕ್ಕಳಿಗೆ ಮನೆಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಡುವಲ್ಲಿ ಪೋಷಕರು ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಬಿಜಿಎಸ್ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಹಾಗೂ ಪೋಷಕರ ಪಾತ್ರ ಬಹಳಷ್ಟು ಮಹತ್ತರವಾದದ್ದು. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಸಹಕಾರವನ್ನು ಪೋಷಕರು ಶಿಕ್ಷಕರಿಗೆ ನೀಡಬೇಕು ಎಂದರು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪೋಷಕರು ಮಾತೃಭೋಜನ ಸಮಾರಂಭಕ್ಕಾಗಿ ತಯಾರಿಸಿ ತಂದಿದ್ದ ವಿವಿಧ ರೀತಿಯ ತಿನಿಸುಗಳನ್ನು ಮಕ್ಕಳಿಗೆ ಉಣಬಡಿಸಲಾಯಿತು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಗಗನಸಿಂಧು, ಎನ್.ನಾಗರಾಜ್, ಭಕ್ತರಹಳ್ಳಿ ಬೈರೇಗೌಡ, ಜಗದೀಶ್, ಜೆ.ವಿ.ವೆಂಕಟಸ್ವಾಮಿ, ಪುರುಷೋತ್ತಮ್, ಗೊರಮಡುಗು ರಾಜಣ್ಣ, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಆರ್.ಮಹದೇವ್, ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.