ADVERTISEMENT

ಶಿಡ್ಲಘಟ್ಟ | ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 6:46 IST
Last Updated 13 ಫೆಬ್ರುವರಿ 2026, 6:46 IST
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಸಂಹಿತೆಗಳು ಕಾರ್ಮಿಕ ವಿರೋಧಿಯಾಗಿವೆ ಎಂದು ಆರೋಪಿಸಿ ಶಿಡ್ಲಘಟ್ಟದಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಸಂಹಿತೆಗಳು ಕಾರ್ಮಿಕ ವಿರೋಧಿಯಾಗಿವೆ ಎಂದು ಆರೋಪಿಸಿ ಶಿಡ್ಲಘಟ್ಟದಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು   

ಶಿಡ್ಲಘಟ್ಟ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಸಂಹಿತೆಗಳು ಕಾರ್ಮಿಕ ವಿರೋಧಿಯಾಗಿವೆ. 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳಾಗಿ ಬದಲಾಯಿಸುವುದರಿಂದ ಉದ್ಯೋಗ ಭದ್ರತೆ ಕಡಿಮೆಯಾಗುತ್ತದೆ ಎಂದು ಆರೋಪಿಸಿ ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ಮೇರೆಗೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಗುರುವಾರ ನಗರದಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಸಿಐಟಿಯು ಜಿಲ್ಲಾಧ್ಯಕ್ಷೆ ಲಕ್ಷ್ಮಿದೇವಮ್ಮ ಮಾತನಾಡಿ, ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳು, ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಖಾಸಗೀಕರಣದ ವಿರುದ್ಧ ಕಾರ್ಮಿಕರು ಧ್ವನಿ ಎತ್ತಬೇಕೆಂದು ಕರೆ ನೀಡಿದರು.

ನಾಲ್ಕು ಕಾರ್ಮಿಕ ಸಂಹಿತೆ ಮತ್ತು ನಿಯಮಗಳನ್ನು ರದ್ದುಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಟ್ರೇಡ್ ಯೂನಿಯನ್ ಹಕ್ಕುಗಳನ್ನು ಉಳಿಸಬೇಕು. ಮೂಲಸೌಕರ್ಯ, ಉತ್ತಮ ಗುಣಮಟ್ಟದ ಆಹಾರ, ಸರಿಯಾದ ಶಾಲಾ ಪೂರ್ವ ಶಿಕ್ಷಣದೊಂದಿಗೆ ಯಶಸ್ವಿ ಐವತ್ತು ವರ್ಷಗಳನ್ನು ಪೂರೈಸಿದ ಐಸಿಡಿಎಸ್ ಅನ್ನು ಸಾಂಸ್ಥಿಕಗೊಳಿಸಬೇಕು. ಇಸಿಸಿಇ ಹಕ್ಕಿಗಾಗಿ ಕಾನೂನನ್ನು ಜಾರಿಗೊಳಿಸಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗ್ರೇಡ್ 3 ಮತ್ತು 4 ಸರ್ಕಾರಿ ನೌಕರರನ್ನಾಗಿ ಕ್ರಮಬದ್ಧಗೊಳಿಸಬೇಕು. ಕನಿಷ್ಠ ವೇತನ, ಪಿಂಚಣಿ, ದೇಶದಾದ್ಯಂತ ಏಕರೂಪ ಸೇವಾ ಷರತ್ತುಗಳು, ಗ್ರಾಚ್ಯುಟಿಗಾಗಿ ಸುಪ್ರಿಂಕೋರ್ಟ್ ಆದೇಶವನ್ನು ತಕ್ಷಣವೇ ಜಾರಿಗೊಳಿಸಬೇಕು ಮುಂತಾದ ಬೇಡಿಕೆ ಈಡೇರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. 

ADVERTISEMENT

ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಬಸ್ ನಿಲ್ದಾಣದ ಬಳಿ ರಸ್ತೆತಡೆ ನಡೆಸಿದರು. ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಪಾಪಣ್ಣ, ಅಶ್ವತ್ಥಮ್ಮ, ಭಾಗ್ಯ, ಹಂಸ, ಮಂಜುಳ, ನಾಗರತ್ನ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.