ADVERTISEMENT

ಶಿಡ್ಲಘಟ್ಟ | ರಾಜಕಾಲುವೆಯಿಂದ ತೆಗೆದ ಹೂಳು ಕೆರೆಗೆ ತುಂಬಿದರು!

ಕಣ್ಣು ಮುಚ್ಚಿ ಕುಳಿತ ನಗರಸಭೆ, ತಾಲ್ಲೂಕು ಆಡಳಿತ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 5:35 IST
Last Updated 3 ಸೆಪ್ಟೆಂಬರ್ 2025, 5:35 IST
ಶಿಡ್ಲಘಟ್ಟದ ಗೌಡನ ಕೆರೆಗೆ ಕಟ್ಟಡಗಳ ಅವಶೇಷ ಮತ್ತು ರಾಜಕಾಲುವೆಯಿಂದ ತೆಗೆದ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದನ್ನು ಕಂಡು ಸ್ಥಳದಲ್ಲಿದ್ದ ರೈತ ಸಂಘದ ಹಯ್ಯಾತ್ ಖಾನ್ ಟ್ರ್ಯಾಕ್ಟರ್ ತಡೆದರು
ಶಿಡ್ಲಘಟ್ಟದ ಗೌಡನ ಕೆರೆಗೆ ಕಟ್ಟಡಗಳ ಅವಶೇಷ ಮತ್ತು ರಾಜಕಾಲುವೆಯಿಂದ ತೆಗೆದ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದನ್ನು ಕಂಡು ಸ್ಥಳದಲ್ಲಿದ್ದ ರೈತ ಸಂಘದ ಹಯ್ಯಾತ್ ಖಾನ್ ಟ್ರ್ಯಾಕ್ಟರ್ ತಡೆದರು   

ಶಿಡ್ಲಘಟ್ಟ: ನಗರದಲ್ಲಿನ ಶೆಟ್ಟಿಗುಣಿಯ ರಾಜಕಾಲುವೆ (ಟೋಲ್‌ ಗೇಟ್ ಬಳಿ ಹಾದು ಹೋಗುವ)ಗೆ ಸಿಮೆಂಟ್ ತಡೆಗೋಡೆ ನಿರ್ಮಿಸುವ ಕಾಮಗಾರಿ ನಡೆಯುತ್ತಿದ್ದು ರಾಜಕಾಲುವೆಯಿಂದ ತೆಗೆಯುತ್ತಿರುವ ತ್ಯಾಜ್ಯ, ಮಣ್ಣು, ಕಸ ಕಡ್ಡಿಯನ್ನು ಗೌಡನ ಕೆರೆಗೆ ತುಂಬಿಸಲಾಗುತ್ತಿದೆ.

ನಗರದಿಂದ ಟೋಲ್‌ಗೇಟ್ ಮೂಲಕ ಗೌಡನಕೆರೆಗೆ ಸಂಪರ್ಕಿಸುವ ರಾಜಕಾಲುವೆಗೆ ನಗರೋತ್ಥಾನ ಹಂತ 4ರ ಅನುದಾನದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು ಸೂಕ್ತ ವಿಲೇವಾರಿ ಮಾಡಬೇಕಾದ ಗುತ್ತಿಗೆದಾರರು ಸಾಗಣೆ ವೆಚ್ಚ ಉಳಿಸಿಕೊಳ್ಳಲು ಸಮೀಪದಲ್ಲೆ ಇರುವ ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ನಗರಸಭೆ ಅಧಿಕಾರಿಗಳು ನೋಡಿಯೂ ನೋಡದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ.

ಲೋಡುಗಟ್ಟಲೆ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದರೂ ತಾಲ್ಲೂಕು ಆಡಳಿತವೂ ನನಗೇನೂ ಸಂಬಂಧ ಇಲ್ಲ ಎನ್ನುವಂತೆ ಮೌನಕ್ಕೆ ಶರಣಾಗಿದೆ. ನಗರಸಭೆ ಹಣದಲ್ಲಿ ರಾಜಕಾಲುವೆಯ ಹೂಳುತೆಗೆದು ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿ ಕೆರೆಗೆ ತುಂಬಿಸಲಾಗುತ್ತಿದೆ.

ADVERTISEMENT

ಕೆರೆಗೆ ಕಟ್ಟಡಗಳ ಅವಶೇಷ, ತ್ಯಾಜ್ಯ ಮತ್ತು ರಾಜಕಾಲುವೆಯಿಂದ ತೆಗೆದ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದನ್ನು ಕಂಡು ಸ್ಥಳದಲ್ಲಿದ್ದ ರೈತ ಸಂಘದ ಹಯ್ಯಾತ್ ಖಾನ್ ಟ್ರ್ಯಾಕ್ಟರ್ ತಡೆದು ಕೆರೆಗೆ ಮಣ್ಣು ಸುರಿಯುವುದನ್ನು ವಿರೋಧಿಸಿದ್ದಾರೆ.

ಆಗ ರಾಜಕಾಲುವೆಯಲ್ಲಿ ಹೂಳು ತೆಗೆದು ಕೆರೆಗೆ ತುಂಬಿಸುತ್ತಿದ್ದ ಗುತ್ತಿಗೆದಾರ ಕೆ.ಬಿ.ಮಂಜುನಾಥ್ ಸ್ಥಳಕ್ಕೆ ಬಂದು, ಶಾಸಕ ರವಿಕುಮಾರ್ ಅವರು ಇಲ್ಲಿ ಮಣ್ಣುಹಾಕಿ ರಸ್ತೆ ಅಗಲ ಮಾಡು ಎಂದು ಹೇಳಿದ್ದು, ಹಾಗಾಗಿ ಅಗಲ ಮಾಡುತ್ತಿದ್ದೇನೆ ಎಂದು ಸಮಜಾಯಿಷಿ ನೀಡಿದ್ದಾರೆ. ನಂತರ ನಗರಸಭೆ ಆಯುಕ್ತೆ ಅಮೃತ ಅವರು ಕೂಡ ಸ್ಥಳಕ್ಕೆ ಆಗಮಿಸಿ ಕೆರೆಯಂಚಿನಲ್ಲಿ ಮಣ್ಣು ಸುರಿಯುತ್ತಿರುವುದು ಏಕೆ, ಯಾರು ಹೇಳಿದ್ದು ಎಂದು ಪ್ರಶ್ನಿಸಿದ್ದಾರೆ.

ಗುತ್ತಿಗೆದಾರ ಕೆ.ಬಿ.ಮಂಜುನಾಥ್ ಇಲ್ಲಿ ಯಾರೋ ಕಟ್ಟಡಗಳ ಅವಶೇಷವನ್ನು ತಂದುಗುಡ್ಡೆ ಹಾಕಿದ್ದರು. ಶಾಸಕರು ಹೇಳಿದ್ದಕ್ಕೆ ಹಸನು ಮಾಡುತ್ತಿದ್ದೇನೆ ಎಂದು ಪೌರಾಯುಕ್ತರನ್ನು ದಿಕ್ಕು ತಪ್ಪಿಸಿದ್ದಾರೆ. ಪೌರಾಯುಕ್ತರು ಕೂಡ ಇಲ್ಲಿ ಹಾಕಬೇಡಿ ಎಂದಷ್ಟೆ ಹೇಳಿ ಏನೂ ಕ್ರಮ ತೆಗೆದುಕೊಳ್ಳದೆ ಅಲ್ಲಿಂದ ಹೊರಟು ಹೋದರು.

ಸ್ಥಳಕ್ಕೆ ಮಾಧ್ಯಮದವರು ಬಂದು ಕೆರೆಗೆ ಮಣ್ಣನ್ನು ಸುರಿಯುತ್ತಿರುವುದನ್ನು ವಿಡಿಯೋ ಚಿತ್ರೀಕರಣ ಮಾಡಲು ಮುಂದಾದಾಗ ಕೆರೆ ಅಂಚಿನಲ್ಲಿ ಗುಡ್ಡೆಹಾಕಿದ್ದ ಕಸ ಕಡ್ಡಿ, ಮಣ್ಣಿನ ರಾಶಿಯನ್ನು ಮತ್ತೆ ಟ್ರ್ಯಾಕ್ಟರ್‌ಗೆ ತುಂಬಿಸಿ ವಾಪಸ್ ಕಳುಹಿಸಿದರು.

ಮಾಧ್ಯಮದವರು, ಅಧಿಕಾರಿಗಳು ಅಲ್ಲಿಂದ ಹೊರಟ ಮೇಲೆ ಇದೀಗ ಮಣ್ಣನ್ನು ಕೆರೆ ಅಂಚಿನ ಬದಲಿಗೆ ಕೆರೆಯ ಒಳಗೆ ಹಾಕಲಾಗುತ್ತಿದೆ. ಸರ್ಕಾರವು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕೆರೆಯ ಹೂಳೆತ್ತುವುದು ಒಂದು ಕಡೆಯಾದರೆ ಅದೇ ಸರ್ಕಾರದ ಭಾಗವಾದ ನಗರಸಭೆಯಿಂದ ಕೈಗೊಂಡ ರಾಜಕಾಲುವೆ ತಡೆಗೋಡೆ ನಿರ್ಮಾಣದ ವೇಳೆ ತ್ಯಾಜ್ಯ ಮಣ್ಣನ್ನು ಕೆರೆಗೆ ತುಂಬಿಸಲಾಗುತ್ತಿದೆ.

ಇದು ಪರಿಸರವಾದಿ ಮತ್ತು ರೈತರ ಕೆಂಗಣ್ಣಿಗೆ ಗುರಿಯಾಗಿದೆ.

ರಾಜಕಾಲುವೆಯಿಂದ ತೆಗೆದ ಹೂಳು ಮಣ್ಣನ್ನು ಗೌಡನಕೆರೆಗೆ ಸುರಿಯುತ್ತಿರುವುದು
ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ
ಈಗಾಗಲೇ ಗೌಡನಕೆರೆಯನ್ನು ಹಲವು ಮಂದಿ ಒತ್ತುವರಿ ಮಾಡಿಕೊಂಡಿದ್ದಾರೆ. ಜಾಲಿ ಗಿಡಗಳು ಸಾಕಷ್ಟು ಕೆರೆಯನ್ನು ಆಕ್ರಮಿಸಿಕೊಂಡಿದೆ. ಉಳಿದಿರುವ ಕೆರೆಯನ್ನು ತ್ಯಾಜ್ಯ ಸುರಿಯುತ್ತಾ ಹಾಳುಮಾಡುತ್ತಿದ್ದಾರೆ. ಕೆರೆಯನ್ನು ಮುಚ್ಚಿ ರಸ್ತೆ ಅಗಲ ಮಾಡಲು ಗುತ್ತಿಗೆದಾರನಿಗೆ ಅನುಮತಿ ಕೊಟ್ಟವರು ಯಾರು. ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು.  ಭಕ್ತರಹಳ್ಳಿ ಬೈರೇಗೌಡ ರೈತಸಂಘದ ರಾಜ್ಯ ಕಾರ್ಯಾಧ್ಯಕ್ಷ ಶಾಸಕರ ಹೆಸರು ದುರ್ಬಳಕೆ ಶಾಸಕ ಬಿ.ಎನ್.ರವಿಕುಮಾರ್ ಅವರು ಶಾಸಕರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಸ್ವಂತ ಹಣ ಖರ್ಚು ಮಾಡಿ ನಗರದ ಹೊರವಲಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234ರ ಅಕ್ಕ ಪಕ್ಕದಲ್ಲಿ ಗುಡ್ಡೆಬಿದ್ದಿದ್ದ ಕಟ್ಟಡಗಳ ಅವಶೇಷ ವಿಲೇವಾರಿ ಮಾಡಿ ನಾಗರಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಆದರೀಗ ಮತ್ತೆ ಹೆದ್ದಾರಿ ಅಂಚಿನ ಗೌಡನಕೆರೆಗೆ ಹೂಳು ತ್ಯಾಜ್ಯದ ಮಣ್ಣನ್ನು ತುಂಬಿಸಲಾಗುತ್ತಿದೆ. ರಸ್ತೆಯಂಚಿನಲ್ಲಿ ಮಣ್ಣನ್ನು ತೆಗೆಸಿದ ಶಾಸಕರ ಹೆಸರನ್ನು ಗುತ್ತಿಗೆದಾರರು ದುರ್ಬಳಕೆ ಮಾಡಿಕೊಂಡರೆ ಎನ್ನುವ ಪ್ರಶ್ನೆ ಸಾರ್ವಜನಿಕರನ್ನು ಕಾಡತೊಡಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.