ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ನಗರದಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಅವರ 63 ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ನಗರದ ಎಂ.ಜಿ.ರಸ್ತೆಯ ಸರ್ಕಾರಿ ಪದವಿ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ ಸೇರಿದಂತೆ ಅನೇಕ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಮಾಲಾರ್ಪಣೆ ಮಾಡಿದರು.
ಬಳಿಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೌನಾಚಾರಣೆ ಮಾಡಲಾಯಿತು.
ಮಹಾನ್ ಚೇತನ
ನಗರದ ಬ್ಲೂಮ್ಸ್ ಕಾಲೇಜಿನಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ವತಿಯಿಂದ ಆಯೋಜಿಸಿದ್ದ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್ಎಸ್ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ‘ಅಂಬೇಡ್ಕರ್ ಅವರು ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವ ಎಂಬ ಮೂಲಭೂತ ತತ್ವಗಳನ್ನು ನೀಡಿದಂತಹ ಮಹಾನ್ ಚೇತನ. ಅವರ ಆದರ್ಶ, ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.
‘ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುವ ಮೂಲಕ ದೀನ ದಲಿತರು, ಶೋಷಿತರ ಬಾಳಲ್ಲಿ ಹೊಸ ಭರವಸೆ ಮೂಡಿಸಿದ್ದ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ಎಂದರೆ ಜನರ ಆರ್ಥಿಕ ಮತ್ತು ಸಾಮಾಜಿಕ ಜೀವನದಲ್ಲಿ ರಕ್ತಪಾತವಿಲ್ಲದೆ ಕ್ರಾಂತಿಕಾರಕ ಬದಲಾವಣೆ ತರುವಂತಹ ಸ್ವರೂಪ ಹೊಂದಿರುವ ಸರ್ಕಾರ ಎಂದು ಪ್ರತಿಪಾದಿಸಿದ್ದರು. ಪರಿನಿರ್ವಾಣ ದಿನದಂದು ನಾವು ಅವರನ್ನು ಗೌರವದಿಂದ ನೆನೆಯುವ ಮೂಲಕ ಗೌರವ ಸಲ್ಲಿಸಬೇಕು’ ಎಂದು ತಿಳಿಸಿದರು.
ಮುಖಂಡರಾದ ಪಟ್ರೇನಹಳ್ಳಿ ಕೃಷ್ಣ, ದೀಪ್ತಿ, ಉಪನ್ಯಾಸಕಿ ಲಕ್ಷ್ಮಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.