ಚಿಕ್ಕಬಳ್ಳಾಪುರ: ‘ಕೊರಮ, ಕೊರಚ, ಭೋವಿ, ಲಂಬಾಣಿ ಜಾತಿಗಳನ್ನು ಪರಿಶಿಷ್ಟ ಜಾತಿ (ಎಸ್ಸಿ) ಪಟ್ಟಿಯಲ್ಲಿ ಮುಂದುವರಿಸುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿ ಜೂನ್ 10ರಂದು ರಾಜ್ಯದಾದ್ಯಂತ ಪತ್ರ ಚಳವಳಿ ನಡೆಸಲಾಗುವುದು’ ಎಂದು ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಏಕಲವ್ಯ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಲೆಮಾರಿಗಳಾದ ಈ ಸಮುದಾಯಗಳು ಇಂದಿಗೂ ಅಸಮಾನತೆ, ತಾರತಮ್ಯ ಹಾಗೂ ಸಾಮಾಜಿಕ ಕಳಂಕಕ್ಕೆ ಗುರಿಯಾಗಿವೆ. ಸಮಾಜದ ಮುಖ್ಯವಾಹಿನಿಗೆ ಬರಲಾಗದೆ ಅಲೆಮಾರಿ ಜಾತಿಗಳಾಗಿಯೇ ಉಳಿದಿವೆ. ಆದ್ದರಿಂದ ಈ ಜಾತಿಗಳನ್ನು ಎಸ್ಸಿ ಪಟ್ಟಿಯಲ್ಲೇ ಮುಂದುವರಿಸುವಂತೆ ಸರ್ಕಾರ ಆಯೋಗಕ್ಕೆ ಶಿಫಾರಸು ಮಾಡಬೇಕು’ ಎಂದು ಆಗ್ರಹಿಸಿದರು.
‘ಕೊರಚ, ಭೋವಿ, ಲಂಬಾಣಿ ಸಮುದಾಯಗಳು ಸ್ವಾತಂತ್ರ್ಯ ಪೂರ್ವದಲ್ಲಿ ಮಿಲ್ಲರ್ ಆಯೋಗದ ವರದಿ ಅನುಸಾರ ಶೋಷಿತ ವರ್ಗಗಳ ಪಟ್ಟಿಯಲ್ಲಿದ್ದವು. ನಂತರ ಈ ಜಾತಿಗಳನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಜಾತಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಮೂಲಭೂತವಾದಿಗಳು ಕೊರಮ, ಕೊರಚ, ಭೋವಿ, ಲಂಬಾಣಿ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈ ಬಿಡುವಂತೆ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸುಪ್ರಿಂಕೋರ್ಟ್ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೆ ಅಹವಾಲು ಸಲ್ಲಿಸಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಎಸ್ಸಿ ಆಯೋಗವು ಕರ್ನಾಟಕ ಸರ್ಕಾರಕ್ಕೆ ವರದಿ ಕೇಳಿದೆ. ಸರ್ಕಾರವು ಎಸ್ಸಿ ಪಟ್ಟಿಯಲ್ಲೇ ಈ ಸಮುದಾಯಗಳನ್ನು ಉಳಿಸಲು ವರದಿ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.
ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷೆ ಸುಗುಣ ಅಶ್ವತ್ಥ್, ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಪ್ಪಯ್ಯ, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್.ನಾಗರಾಜ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.