ಗೌರಿಬಿದನೂರು: ಕೋವಿಡ್ ಸಂಕಷ್ಟದ ಸಮಯದಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಪಡೆದಿದ್ದನ್ನು ನೆನಪಿನಲ್ಲಿಟ್ಟುಕೊಂಡು ಈ ಬಾರಿಯೂ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಚಿಂತಿಸಬೇಕಾಗಿದೆ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲ್ಲೂಕು ಪಂಚಾಯಿತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಜನವರಿಯಿಂದ ಆರಂಭವಾದ ಶಾಲೆಗಳು ಈ ಬಾರಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾಗಿವೆ. ಶಿಕ್ಷಕರು ಶಾಲಾ ಅವಧಿಯಲ್ಲಿ ಪಠ್ಯ ವಿಷಯಗಳ ಬಗ್ಗೆ ಆಸಕ್ತಿ ಮತ್ತು ಅವಧಾನವನ್ನು ಹೊಂದುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬೇಕಾಗಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯ ಸಹಕಾರ ಸದಾ ಇರುತ್ತದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ ಮಾತನಾಡಿ, ಕಳೆದ 3-4 ತಿಂಗಳಿನಿಂದಲೇ ಸರ್ಕಾರದ ಆದೇಶದ ಅನ್ವಯ ಆನ್ ಲೈನ್ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರು ಅವಲೋಕನ ಮಾಡುತ್ತಿದ್ದಾರೆ. ಇದೀಗ ಶಾಲೆಗಳು ಆರಂಭವಾಗಿದ್ದು, ನಿರಂತರವಾಗಿ ವಿದ್ಯಾರ್ಥಿಗಳ ಕಲಿಕೆ ಮತ್ತು ಶೈಕ್ಷಣಿಕ ಪ್ರಗತಿಯ ಬಗ್ಗೆ ವಿವಿಧ ಆಯಾಮಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಾಲ್ಲೂಕಿನ ಎಲ್ಲ ಪ್ರೌಢಶಾಲೆಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷಿಸುತ್ತಿದ್ದೇವೆ ಎಂದರು.
ಇದೇ ವೇಳೆ ತಾ.ಪಂ ಅಧ್ಯಕ್ಷ ಆರ್.ಲೋಕೇಶ್, ತಾ.ಪಂ ಇಒ ಎನ್.ಮುನಿರಾಜು, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಜಗದೀಶ್, ಎಲ್ಲ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.