
ಮೊರಾರ್ಜಿ ದೇಸಾಯಿ ವಸತಿ ಶಾಲೆ
ಚಿಕ್ಕಬಳ್ಳಾಪುರ: ತಾಲ್ಲೂಕಿನ ಪೆರೇಸಂದ್ರದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯ ಶಿಕ್ಷಕರ ದೇವರಾಜ್ ಅವರನ್ನು ಅಮಾನತುಗೊಳಿಸಿರುವ ಕ್ರಮ ಖಂಡಿಸಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮನವಿ ಸಲ್ಲಿಸಿದ್ದಾರೆ.
ವಸತಿ ಶಾಲೆಯ ಶಿಕ್ಷಕರ ನಡುವಿನ ತಿಕ್ಕಾಟದಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲು ತುಳಿಯುವಂತಾಗಿದೆ ಎಂದು ಶಿಕ್ಷಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.
ಹಿಂದಿ ಭಾಷಾ ಶಿಕ್ಷಕ ದೇವರಾಜ್ ಅವರನ್ನು ಎರಡು ದಿನಗಳ ಹಿಂದೆ ಅಲ್ಪಸಂಖ್ಯಾತ ಇಲಾಖೆಯು ಕೆಲಸದಿಂದ ಅಮಾತುಗೊಳಿಸಿತ್ತು. ಈ ಅಮಾನತಿಗೆ ವಸತಿ ಶಾಲೆಯಲ್ಲಿನ ಶಿಕ್ಷಕರ ನಡುವಿನ ತಿಕ್ಕಾಟವೇ ಪ್ರಮುಖ ಕಾರಣ ಎನ್ನುವ ಮಾತುಗಳಿವೆ.
ಅಮಾನತಿಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದು, ‘ನಮ್ಮ ಶಿಕ್ಷಕರು ಯಾವುದೇ ತಪ್ಪು ಮಾಡಿಲ್ಲ. ಅವರ ಅಮಾನತು ವಾಪಸ್ ಪಡೆಯಬೇಕು’ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಇಲ್ಲದ ಕಾರಣ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನುತ್ತವೆ ಮೂಲಗಳು.
ಅಧಿಕಾರಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಶುಕ್ರವಾರ ರಾತ್ರಿ ಶಾಲೆಗೆ ತಹಶೀಲ್ದಾರ್ ಸಹ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.