ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪಕ್ಷೇತರ ಸದಸ್ಯ ಸುಬ್ರಹ್ಮಣ್ಯಾಚಾರಿ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಸುಬ್ರಹ್ಮಣ್ಯಾಚಾರಿಯೇ ಅಧ್ಯಕ್ಷರಾಗುವ ನಿರೀಕ್ಷೆ ಇತ್ತು.
12 ವರ್ಷಗಳ ನಂತರ ಚಿಕ್ಕಬಳ್ಳಾಪುರ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. 2013ರ ತರುವಾಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯೇ ನಡೆದಿರಲಿಲ್ಲ.
ಜು.22ರಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಪೌರಾಯುಕ್ತರ ಸಮ್ಮುಖದಲ್ಲಿ 11 ನಗರಸಭಾ ಸದಸ್ಯರ ಹೆಸರನ್ನು ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲಾಗಿತ್ತು. ಎಲ್ಲ ಸದಸ್ಯರು ಸರ್ವಾನುಮತದಿಂದ ತೀರ್ಮಾನಿಸಿದ್ದರು. ಈ ಆಯ್ಕೆಯಾದ ಸದಸ್ಯರನ್ನು ಪೌರಾಯುಕ್ತರು ಸಭೆ ಓದಿ, ಸಭೆಯಲ್ಲಿ ರೆಕಾರ್ಡ್ ಸಹ ಮಾಡಿದ್ದರು.
ಈ ನಡುವೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮತ್ತು ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಡಿ.ಎಸ್.ಆನಂದರೆಡ್ಡಿ ಬಾಬು ಸಹ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯನ್ನು ಪೌರಾಯುಕ್ತರಿಗೆ ನೀಡಿದ್ದರು. ಸಾಮಾನ್ಯ ಸಭೆಯಲ್ಲಿ ರೆಕಾರ್ಡ್ ಮಾಡಿರುವ ಪಟ್ಟಿಯೇ ಅಂತಿಮ ಎಂದು ಪೌರಾಯುಕ್ತರು ತಿಳಿಸಿದ್ದರು. ಈ ಎಲ್ಲ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ವಿಚಾರವು ಕುತೂಹಲಕ್ಕೆ ಕಾರಣವಾಗಿತ್ತು.
ಸ್ಥಾಯಿ ಸಮಿತಿ ರಚನೆ ವಿಚಾರವು ಆಡಳಿತ ಪಕ್ಷದ ಸದಸ್ಯರ ನಡುವೆ ಜಟಾಪಟಿಗೆ ನಡೆದ ನಂತರ ಸಂಸದ ಡಾ.ಕೆ. ಸುಧಾಕರ್ ರಂಗಪ್ರವೇಶಿಸಿದ್ದರು. ಸದಸ್ಯರ ಸಭೆ ನಡೆಸಿ ಸುಬ್ರಹ್ಮಣ್ಯಾಚಾರಿ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ತೀರ್ಮಾನಿಸಿದ್ದರು.
ಡಿ.ಎಸ್.ಆನಂದರೆಡ್ಡಿ ಬಾಬು, ಸತೀಶ್, ಮಂಜುನಾಥ್ ಸೇರಿದಂತೆ ಸ್ಥಾಯಿ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.