ಚಿಕ್ಕಬಳ್ಳಾಪುರ: ‘ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಪ್ಪುಗಳಿದ್ದರೆ ಪರಿಷ್ಕರಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮತದಾರರ ಸಾಕ್ಷರತಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಮತದಾರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಅಕ್ಟೋಬರ್ 15 ರವರೆಗೆ ನಡೆಸಲಾಗುತ್ತದೆ. ಮತದಾರರ ಪಟ್ಟಿಯಲ್ಲಿ 18 ವರ್ಷ ದಾಟಿದವರು ಹೆಸರು ಸೇರ್ಪಡೆ ಮಾಡುವುದು, ಮರಣ ಹೊಂದಿದವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕುವುದು, ಹೆಸರು, ವಿಳಾಸ, ಭಾವಚಿತ್ರ, ವಯಸ್ಸು ಮುಂತಾದ ವಿವರಗಳು ತಪ್ಪುಗಳನ್ನು ತಿದ್ದುಪಡಿ ಮಾಡಬಹುದು’ ಎಂದು ತಿಳಿಸಿದರು.
‘ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಲು, ತೆಗೆದು ಹಾಕಲು, ತಿದ್ದುಪಡಿಗೆ ಸಾರ್ವಜನಿಕರು ಮನೆಗೆ ಭೇಟಿ ನೀಡುವ ಮತಗಟ್ಟೆ ಹಂತದ ಅಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ನಿಗದಿಪಡಿಸಿದ ಆಯ್ದ ಎಂಟು ದಾಖಲೆಗಳ ಪೈಕಿ ಒಂದನ್ನು ಸಲ್ಲಿಸಬೇಕು. ಸಾಮಾನ್ಯ ಸೇವಾ ಕೇಂದ್ರ, ಅಟಲ್ಜಿ ಜನಸ್ನೇಹಿ ಕೇಂದ್ರ, ಮತದಾರರ ನೋದಣಿ ಕೇಂದ್ರ, ಗ್ರಾಮ ಪಂಚಾಯತಿಯಲ್ಲಿನ ಬಾಪೂಜಿ ಕೇಂದ್ರದಲ್ಲಿ ಕೂಡ ಈ ಪ್ರಕ್ರಿಯೆ ನಡೆಯಲಿದೆ’ ಎಂದರು.
‘ಅಂಗವಿಕಲರಿಗೆ ಜಿಲ್ಲಾಧಿಕಾರಿ ಕಚೇರಿಯ 1950 ಸಹಾಯವಾಣಿ ಕೇಂದ್ರದ ಸಹಾಯದೊಂದಿಗೆ ಮತದಾರರ ಪಟ್ಟಿಯಲ್ಲಿರುವ ತಮ್ಮ ವಿವರಗಳ ಸೇರ್ಪಡೆ, ತಿದ್ದುಪಡಿ ಮಾಡಿಸಲು ಅವಕಾಸ ಕಲ್ಪಿಸಲಾಗಿದೆ. ನಾಗರಿಕರು ತಮ್ಮ ಕುಟುಂಬಕ್ಕೆ ಸಂಬಂಧಪಟ್ಟ ಮಾಹಿತಿಯನ್ನು www.nusp.in ಜಾಲತಾಣದ ಮೂಲಕವೂ ಮಾಹಿತಿಯನ್ನು ದಾಖಲಿಸಿ ಪರಿಶೀಲಿಸಬಹುದು’ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಎಲ್.ಹರ್ಷವರ್ಧನ್, ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರಾದ ಸತೀಶ್ ಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.