ADVERTISEMENT

ಮಳ್ಳೂರಾಂಭ ದೇಗುಲದ ಸರ್ವೆಗೆ ಅಸ್ತು

ದೇವರಮಳ್ಳೂರು: ಡಿ.ಸಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 3:07 IST
Last Updated 20 ಮಾರ್ಚ್ 2022, 3:07 IST
ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಶಾಸಕ ವಿ. ಮುನಿಯಪ್ಪ ವೃದ್ಧೆಯೊಬ್ಬರಿಗೆ ಪಿಂಚಣಿ ಆದೇಶ ಪತ್ರ ವಿತರಿಸಿದರು
ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಶಾಸಕ ವಿ. ಮುನಿಯಪ್ಪ ವೃದ್ಧೆಯೊಬ್ಬರಿಗೆ ಪಿಂಚಣಿ ಆದೇಶ ಪತ್ರ ವಿತರಿಸಿದರು   

ಶಿಡ್ಲಘಟ್ಟ: ‘ಗ್ರಾಮೀಣ ಭಾಗದಲ್ಲಿ ಅಗತ್ಯ ಸವಲತ್ತು ಪಡೆದುಕೊಳ್ಳಲು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು’ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.

ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಭಾಗದ ಸಮಸ್ಯೆಗಳನ್ನು ಜನರ ಬಳಿಗೆಹೋಗಿ ಆಲಿಸಿ ಬಗೆಹರಿಸಿಕೊಡುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತದಿಂದ ಗ್ರಾಮ ವಾಸ್ತವ್ಯ ಆಯೋಜಿಸಲಾಗಿದೆ. ಪಿಂಚಣಿ, ಪವತಿ ಖಾತೆ, ಖಾತೆ ತಿದ್ದುಪಡಿ, ಸ್ಮಶಾನ, ನಿವೇಶನ ನೀಡುವುದು, ರಸ್ತೆ ಸಮಸ್ಯೆ ಅಥವಾ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸುವುದು, ಇವೆಲ್ಲವನ್ನೂ ಒಳಗೊಂಡಂತೆ ಗ್ರಾಮ ವಾಸ್ತವ್ಯದ ಮೂಲಕ ಹಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಲಾಗುವುದು ಎಂದರು.

ADVERTISEMENT

ತಹಶೀಲ್ದಾರ್ ಬಿ.ಎಸ್. ರಾಜೀವ್ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸವಲತ್ತು ಸಿಗಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಜನರೊಂದಿಗೆ ಬೆರೆತು ಅಗತ್ಯ ಸವಲತ್ತು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇಂದಿನ ಗ್ರಾಮ ವಾಸ್ತವ್ಯದಲ್ಲಿ ಪ್ರಮುಖವಾಗಿ ಗ್ರಾಮದ ಮಳ್ಳೂರಾಂಭ ದೇವಾಲಯದ ಸುತ್ತಲಿನ ನಾಲ್ಕು ಎಕರೆ ಜಾಗದ ಸರ್ವೆ ಕಾರ್ಯ ನಡೆಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು. ಗ್ರಾಮಸ್ಥರ ಮನವಿ ಮೇರೆಗೆ ಗ್ರಾಮದಲ್ಲಿ ಪಶು ಆಸ್ಪತ್ರೆ ನಿಮಾಣ ಮಾಡಲು ಸ್ಥಳ ನಿಗದಿಪಡಿಸಲಾಗುವುದು. ಸಾರ್ವಜನಿಕ ಸ್ಮಶಾನ ಸೇರಿದಂತೆ ಶಾಲಾ ಕಟ್ಟಡ ನಿರ್ಮಾಣ ಹಾಗೂ ಆಟದ ಮೈದಾನಕ್ಕಾಗಿ ಸ್ಥಳ ನಿಗದಿ ಮಾಡಲು ಶಾಸಕರು ಸೂಚನೆ ನೀಡಿದ್ದಾರೆ. ಅದರಂತೆ ಸ್ಥಳ ನಿಗದಿ ಮಾಡಲಾಗುವುದು. ದೇವರ ಮಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಕುಂಟೆ, ಕಾಲುವೆ ಮತ್ತಿತರ ಸರ್ಕಾರಿ ಜಾಗಗಳನ್ನು ತೆರವುಗೊಳಿಸಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಚಂದ್ರಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಪೇಗೌಡ, ರೇಷ್ಮೆ ಇಲಾಖೆಯ ತಿಮ್ಮರಾಜು, ಆರ್.ಐ. ಪ್ರಶಾಂತ್, ಗ್ರಾಮ ಲೆಕ್ಕಿಗರಾದ ಲಾರೆನ್ಸ್, ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.