ಗೌರಿಬಿದನೂರು: ನಗರದ 11ನೇ ವಾರ್ಡ್ ವ್ಯಾಪ್ತಿಯ ವಿದ್ಯಾನಗರದಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿಗಳಲ್ಲಿ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ರಾಜಕೀಯ ಹಸ್ತಕ್ಷೇಪ ಮಾಡುವ ಮೂಲಕ ಅವೈಜ್ಞಾನಿಕವಾಗಿ ಕಾಮಗಾರಿ ನಿರ್ಮಿಸಿ ಬಡವರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ಚನ್ನಪ್ಪ ಹೂಗಾರ ದೂರಿದ್ದಾರೆ.
ಚರಂಡಿ ಕಾಮಗಾರಿಯಿಂದ ಬಡಾವಣೆಯು ಪ್ರಗತಿಯಾಗುತ್ತದೆ ಎಂಬ ಸಂತಸವಿದೆ. ಆದರೆ, ಕಾಮಗಾರಿಯ ಜವಾಬ್ದಾರಿ ಹೊತ್ತ ಗುತ್ತಿಗೆದಾರರು, ಅಧಿಕಾರಿಗಳ ಅವೈಜ್ಞಾನಿಕ ಆದೇಶದಿಂದ ವಿನಾಕಾರಣ ಬಡಾವಣೆಯಲ್ಲಿನ ಜನತೆಗೆ ತೊಂದರೆ ನೀಡುತ್ತಿದ್ದಾರೆ. ಜತೆಗೆ ಮೂಲಸೌಕರ್ಯ ಕಲ್ಪಿಸಬೇಕಾದ ಅಧಿಕಾರಿಗಳೇ ಈ ವಿಚಾರದಲ್ಲಿ ದಬ್ಬಾಳಿಕೆ ನಡೆಸುವ ಮೂಲಕ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾನೂನಾತ್ಮಕವಾಗಿ ಬಡಾವಣೆಯ ನಕ್ಷೆ ಪ್ರಕಾರ ಇರುವ ಅಳತೆಯಲ್ಲಿ ಚರಂಡಿ ಕಾಮಗಾರಿ ಮಾಡುತ್ತಿಲ್ಲ. ಮನಬಂದಂತೆ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಜಾಣ ಕುರುಡುನೀತಿ ಅನುಸರಿಸುತ್ತಿದ್ದಾರೆ. ಈ ವಿಚಾರವಾಗಿ ಪ್ರಶ್ನಿಸಿದರೆಪೊಲೀಸರ ಮೂಲಕ ಹೆದರಿಸಲು ಮುಂದಾಗುತ್ತಿದ್ದಾರೆ. ಈಗಾಗಲೇ ನಗರ ಪೊಲೀಸ್ ಠಾಣೆಗೆ ಅಧಿಕಾರಿಗಳ ವರ್ತನೆ ಹಾಗೂ ಅವೈಜ್ಞಾನಿಕ ಕಾಮಗಾರಿ ನಿರ್ಮಾಣದ ವಿರುದ್ಧ ದೂರು ನೀಡಿದ್ದೇನೆ. ಆದರೆ, ಅಧಿಕಾರಿಗಳು ದೂರು ವಾಪಸ್ ಪಡೆಯುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ ಈ ಬಗ್ಗೆ ಪರಿಶೀಲನೆ ನಡೆಸಬೇಕು. ಬಡಾವಣೆಯಲ್ಲಿನ ಬಡವರಿಗೆ ನ್ಯಾಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.