ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಸೋಂಕು ಸೃಷ್ಟಿಸಿದ ಬಿಕ್ಕಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿರುವ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಉದಾರ ನಿಧಿ ಒದಗಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ’ಕುಸಿಯುತ್ತಿರುವ ದೇಶದ ಜಿಡಿಪಿ ಏರಿಕೆಗೆ ಕೇಂದ್ರ ಸರ್ಕಾರ ಹಣಕಾಸು ಉತ್ತೇಜನ ಪ್ಯಾಕೇಜ್ ಘೋಷಿಸಬೇಕು‘ ಎಂದು ಆಗ್ರಹಿಸಿದರು.
’ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸುರಕ್ಷತಾ ಕಿಟ್ಗಳನ್ನು ನೀಡುವ ಜತೆಗೆ ವಿಮೆ ಸೌಲಭ್ಯ ಕಲ್ಪಿಸಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬರದ ಕುಟುಂಬಗಳಿಗೆ ತಕ್ಷಣವೇ ತಲಾ ₹7,500 ನಗದು ನೆರವು ನೀಡಬೇಕು‘ ಎಂದು ಹೇಳಿದರು.
’ಪ್ರತಿ ಮನೆಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ವಿತರಿಸಬೇಕು. ಮಾರುಕಟ್ಟೆ ತೊಂದರೆಯಿಂದ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕು. ಕಾರ್ಮಿಕರಿಗೆ ಉದ್ಯೋಗ ನಷ್ಟ, ಸಂಬಳ ಕಡಿತದಂತಹ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಉದ್ಯೋಗದಾತರಿಗೆ ಆರ್ಥಿಕ ನೆರವು ಒದಗಿಸಬೇಕು‘ ಎಂದು ತಿಳಿಸಿದರು.
’ವಲಸೆ ಕಾರ್ಮಿಕರಿಗೆ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಪಿಂಚಣಿ ಹಾಗೂ ಮಾಸಿಕ ಸಹಾಯಧನ ಪಡೆಯುವವರಿಗೆ ಎರಡು ತಿಂಗಳ ಮುಂಗಡ ಹಣ ಒದಗಿಸಬೇಕು. ನಿರ್ಗತಿಕರು, ಅನಾಥರು, ಅಂಗವಿಕಲರಿಗೆ ನಿತ್ಯ ಊಟ ಪೂರೈಸಬೇಕು‘ ಎಂದರು.
ಸಂಘದ ಪದಾಧಿಕಾರಿಗಳಾದ ಆರ್.ಬಸವರಾಜ್, ಆಂಜನಮ್ಮ, ಶೋಭಾ, ಅಂಬಿಕಾ, ಪಾರ್ವತಮ್ಮ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.