ADVERTISEMENT

ವಾಲ್ಮೀಕಿ ಸಮುದಾಯದ ಕಿವಿಗೆ ಹೂವಿಟ್ಟ ಯಡಿಯೂರಪ್ಪ; ಪ್ರಸನ್ನಾನಂದಪುರಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 15:22 IST
Last Updated 8 ಆಗಸ್ಟ್ 2021, 15:22 IST
ಪ್ರಸನ್ನಾನಂದಪುರಿ ಸ್ವಾಮೀಜಿ
ಪ್ರಸನ್ನಾನಂದಪುರಿ ಸ್ವಾಮೀಜಿ   

ಚಿಕ್ಕಬಳ್ಳಾಪುರ: ವಾಲ್ಮೀಕಿ ನಾಯಕರು ರಾಜ್ಯದ ನಾಲ್ಕನೇ ದೊಡ್ಡ ಸಮುದಾಯ. ರಾಜ್ಯ ಸಚಿವ ಸಂಪುಟದಲ್ಲಿ ಸಮುದಾಯದ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜನಸಂಖ್ಯೆ ಆಧಾರದಲ್ಲಿ ಇನ್ನೂ ಇಬ್ಬರಿಗೆ ಅವಕಾಶ ನೀಡಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.

ನಗರದಲ್ಲಿ ಭಾನುವಾರ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಸಚಿವ ಸಂಪುಟದಲ್ಲಿ ಮೂರು ಸ್ಥಾನಗಳನ್ನು ನೀಡಬೇಕು. ಮುಖ್ಯಮಂತ್ರಿ ಹಾಗೂ ಬಿಜೆಪಿ ಹೈಕಮಾಂಡ್‌ ಅನ್ನು ಸಮುದಾಯದ ಪರವಾಗಿ ಆಗ್ರಹಿಸುತ್ತೇನೆ ಎಂದರು.

ನಮ್ಮವರು ಅಧಿಕಾರದಲ್ಲಿ ಇದ್ದರೆ ಆಸ್ತಿ ಮಾಡಿಕೊಳ್ಳಬಹುದು. ಅಧಿಕಾರ ಪಡೆಯಬಹುದು ಎಂದು 78 ವರ್ಷದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸುವಂತೆ ಸಮಸ್ತ ವೀರಶೈವ ಲಿಂಗಾಯತರು ಆಗ್ರಹಿಸಿದರು.ನಮ್ಮ ದೇಶವನ್ನು ಜಾತ್ಯತೀತ ಎಂದು ಹೇಳಬಹುದು. ಆದರೆ ಇಲ್ಲಿ ಜಾತಿಯೇ ಸತ್ಯ. ಇದನ್ನು ವಾಲ್ಮೀಕಿ ಸಮುದಾಯ ಅರ್ಥ ಮಾಡಿಕೊಳ್ಳಬೇಕು ಎಂದರು.

ADVERTISEMENT

ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವ ವಿಚಾರದಲ್ಲಿ 2020ರಲ್ಲಿ ನಡೆದ ಎರಡನೇ ‌ವಾಲ್ಮೀಕಿ ಜಾತ್ರೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಶೇ 7.5ರಷ್ಟು ಮೀಸಲಾತಿ ನೀಡದಿದ್ದರೆ ಆಮರಣಾಂತ ಉಪವಾಸ ಮಾಡುವೆ ಎಂದು ಮೂರನೇ ವರ್ಷದ ವಾಲ್ಮೀಕಿ ಜಾತ್ರೆಯಲ್ಲಿ ಎಚ್ಚರಿಸಿದ್ದೆ. ಆಗ ಯಡಿಯೂರಪ್ಪ ಅವರು ನನ್ನ ಮೇಲೆ ನಂಬಿಕೆಯಿಡಿ ಎಂದರು. ಈಗ ಮಾಜಿ ಮುಖ್ಯಮಂತ್ರಿಗಳಾಗಿ ಮೊಮ್ಮಕ್ಕಳನ್ನು ಆಡಿಸುತ್ತಿದ್ದಾರೆ. ನಮ್ಮನ್ನು ಮತಬ್ಯಾಂಕ್ ಮಾಡಿಟ್ಟುಕೊಳ್ಳುತ್ತಿದ್ದಾರೆ ಎನ್ನುವುದನ್ನು ಸಮುದಾಯ ಅರ್ಧ ಮಾಡಿಕೊಳ್ಳಬೇಕು. ಅಧಿಕಾರಕ್ಕೆ ಬಂದ ಮೇಲೆ ಸಮುದಾಯದ ಆಶೋತ್ತರಗಳನ್ನು ಮರೆಯುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.