ADVERTISEMENT

ಕಾರ್ಮಿಕರ ಹಕ್ಕುಗಳ ಮೊಟಕಿಗೆ ಹುನ್ನಾರ

‘ಅಖಿಲ ಭಾರತ ಸಾರ್ವತ್ರಿಕ ಮುಷ್ಕರ’ ಬೆಂಬಲಿಸಿ ನಗರದಲ್ಲಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ‘ ಪದಾಧಿಕಾರಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 6:04 IST
Last Updated 27 ನವೆಂಬರ್ 2020, 6:04 IST
ನಗರದಲ್ಲಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ' ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ನಗರದಲ್ಲಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ' ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿಗುರುವಾರ‘ಅಖಿಲ ಭಾರತ ಸಾರ್ವತ್ರಿಕ ಮುಷ್ಕರ’ದ ಪ್ರಯುಕ್ತ ನಗರದಲ್ಲಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಸಾರ್ವತ್ರಿಕ ಮುಷ್ಕರದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಂತರ ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ನಂತಹ ವಿಪತ್ತಿನ ಸಂದರ್ಭದಲ್ಲಿ ರೈತ, ಕಾರ್ಮಿಕ ಮತ್ತು ಅಂಗನವಾಡಿ, ಬಿಸಿಯೂಟ ಸಿಬ್ಬಂದಿ ವಿರೋಧಿ ಕಾಯ್ದೆ ಜಾರಿಗೊಳಿಸಿ ಜನವಿರೋಧಿ ತೀರ್ಮಾನ ತೆಗೆದುಕೊಂಡಿವೆ’ ಎಂದು ಆರೋಪಿಸಿದರು.

ADVERTISEMENT

‘ಕಾರ್ಮಿಕ ಸಂಘಟನೆಗೆ ಸಂಬಂಧಿಸಿದಂತೆ 44 ಕಾನೂನು ತಿದ್ದುಪಡಿ ತಂದು ಸಂಘಟನೆ ಶಿಥಿಲಗೊಳಿಸಿ ಬಂಡವಾಳಶಾಹಿಗಳ ಕೈ ಬಲಪಡಿಸುವ ಕೆಲಸವನ್ನು ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಮಾಡಿದೆ. ಹಣಕಾಸು ವಲಯ ಸೇರಿದಂತೆ ರೈಲ್ವೆ, ವಿಮಾನಯಾನ, ಆರೋಗ್ಯ, ಶಿಕ್ಷಣ, ವಿದ್ಯುತ್, ದೂರ ಸಂಪರ್ಕ, ಬ್ಯಾಂಕ್, ವಿಮಾ ಮತ್ತತರ ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

‘ಕಾರ್ಮಿಕರ ಹಕ್ಕುಗಳನ್ನು ಹಂತ ಹಂತವಾಗಿ ಕಿತ್ತುಕೊಂಡು ಗುಲಾಮಗಿರಿ ಸಂಸ್ಕೃತಿಗೆ ದೇಶ ಹೆಜ್ಜೆ ಹಾಕಿದೆ. ಇದರಿಂದ ಕಾರ್ಮಿಕ ತನ್ನ ಸ್ವಾತಂತ್ರ್ಯ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾನೆ. ಸರ್ಕಾರದ ಉತ್ಪಾದನಾ ಮತ್ತು ಸೇವಾ ಸಂಸ್ಥೆಗಳ ಸಾಂಸ್ಥೀಕರಣವನ್ನು ನಿಲ್ಲಿಸಿ. ಎಲ್ಲಾ ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಹಾಗೂ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು’ ಎಂದು ಹೇಳಿದರು.

‘ನೂತನ ಶಿಕ್ಷಣ ನೀತಿ 2020 ಜಾರಿಗೊಳಿಸುವಾಗ ಬಿಸಿಯೂಟ ಯೋಜನೆಯನ್ನು ಬಲಿಷ್ಠಪಡಿಸಿ ಈಗಿರುವ ಮಾದರಿಯನ್ನು ಮುಂದುವರಿಸಬೇಕು. ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ, ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು’ ಎಂದು ಹೇಳಿದರು.

‘ಕೆಲಸದ ಅವಧಿಯನ್ನು 4ರಿಂದ 6ಗಂಟೆಗೆ ಹೆಚ್ಚಿಸಬೇಕು. ಶಾಲೆಗಳಲ್ಲಿ ‘ಡಿ’ ಗ್ರೂಪ್‌ ನೌಕರರಿಲ್ಲ. ಹಾಗಾಗಿ ಅಕ್ಷರದಾಸೋಹ ನೌಕರರನ್ನೇ ಶಾಲೆಯ ವಿವಿಧ ಕೆಲಸಗಳಿಗೆ ಬಳಸಿಕೊಂಡು ಶಾಲಾ ಸಿಬ್ಬಂದಿ ಎಂದು ನೇಮಕಾತಿ ಮಾಡಿಕೊಳ್ಳಬೇಕು. ಕೊರೊನಾ ಸಂದರ್ಭದ ವೇತನವನ್ನು ಏಪ್ರಿಲ್‌ನಿಂದಲೇ ಕೊಡಬೇಕು’ ಎಂದು ತಿಳಿಸಿದರು.

‘ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನ ಒಳಗೆ ವೇತನ ಪಾವತಿಯಾಗಬೇಕು. ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು. ಪ್ರತಿ ಶಾಲೆಯಲ್ಲಿ ಇಬ್ಬರು ಅಡುಗೆಯವರು ಇರಲೇಬೇಕು. ನಿವೃತ್ತಿ ವೇತನ ಮತ್ತು ಆರೋಗ್ಯ ಸೌಲಭ್ಯ ಒದಗಿಸಬೇಕು’ ಎಂದರು.

‘ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಆದಾಯ ತೆರಿಗೆ ವ್ಯಾಪ್ತಿ ಹೊರಗಿರುವ ಕುಟುಂಬಗಳಿಗೆ ₹ 7,500 ನಗದು ನೀಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ದಿನಗಳನ್ನು ವಾರ್ಷಿಕ 200 ದಿನಗಳಿಗೆ ವಿಸ್ತರಿಸಿ ಕನಿಷ್ಠ ಕೂಲಿಯನ್ನು ₹ 600ಕ್ಕೆ ಏರಿಕೆ ಮಾಡಬೇಕು’ ಎಂದು ಹೇಳಿದರು.

ಕಾರ್ಯದರ್ಶಿ ಕೆ.ಆರ್.ಮಂಜುಳಾ, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಮುನಿರತ್ನಾ, ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರವಿಕುಮಾರ್, ಹಾಸ್ಟೆಲ್‌ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕದಿರಪ್ಪ, ಸಿಐಟಿಯು ಪದಾಧಿಕಾರಿಗಳಾದ ನವೀನ್, ಸುಮಿತ್ರಾ, ಪದ್ಮಾ, ಗಾಯತ್ರಿ, ಗೋಪಾಲ್, ಲಕ್ಷ್ಮಮ್ಮ, ಭಾಗ್ಯ ಮುಷ್ಕರದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.