ನರಸಿಂಹರಾಜಪುರ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸಚಿವರು ಹಳದಿ ಎಲೆ ರೋಗ ಪೀಡಿತ ಅಡಿಕೆ ತೋಟದ ರೈತರಿಗೆ ನೀಡಿದ ಭರವಸೆಯಂತೆ ರೂ. 1400 ಕೋಟಿಯನ್ನು ಇದೇ 10ರೊಳಗೆ ಬಿಡುಗಡೆ ಮಾಡದಿದ್ದರೆ ಪಕ್ಷದ ಕಾರ್ಯಕರ್ತರು, ಚುನಾಯಿತ ಜನಪ್ರತಿನಿಧಿಗಳು ಹಾಗೂ ರೈತರೊಂದಿಗೆ ಸೇರಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಶಾಸಕ ಡಿ.ಎನ್.ಜೀವರಾಜ್ ತಿಳಿಸಿದರು.
ಇಲ್ಲಿನ ಶಾಸಕರ ಕಚೇರಿಯ ಆವರಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ, ಪಂಗಡದವರಿಗೆ ಗಂಗಾ ಕಲ್ಯಾಣ ಯೋಜನೆಯ ಮೋಟಾರ್, ಕೊಳವೆ ಮತ್ತಿತರ ಪರಿಕರಗಳನ್ನು ವಿತರಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ ವ್ಯಾಪ್ತಿಯ ಎಸ್.ಸಿ, ಎಸ್.ಟಿಗೆ ಸೇರಿದ 23 ಫಲಾನುಭವಿಗಳಿಗೆ ಗಂಗಾಕಲ್ಯಾಣದ ಪರಿಕರ ವಿತರಿಸಲಾಗಿದೆ. ಉಳಿದ ವರ್ಗದಜನರಿಗೆ 15 ದಿನಗಳೊಳಗಾಗಿ ಪರಿಕರ ವಿತರಿಸಲಾಗುವುದು. ಎಲ್ಲಾ ಗಂಗಾಕಲ್ಯಾಣ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದರು.
ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ತನ್ನ ಪಾಲನ್ನು ನೀಡಲು ಸಿದ್ಧವಿದೆ. ಕೇಂದ್ರ ಸರ್ಕಾರ ಗೋರಕ್ ಸಿಂಗ್ವರದಿ ಜಾರಿಗೊಳಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಪರಿಹಾರ ನೀಡ ಬೇಕೆಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಸಾಲ ಮನ್ನಾ ಮಾಡುವ ಬದಲು ಬಡ್ಡಿ ಯನ್ನು ಅಸಲನ್ನಾಗಿ ಮಾರ್ಪಡಿಸಿ ದೀ ರ್ಘಾವಧಿ ಮತ್ತು ಮಧ್ಯಮಾವಧಿ ಸಾಲಪರಿವರ್ತಿಸಲು ಆದೇಶಿಸಿದೆ ಇದ ರಿಂದ ರೈತರಿಗೆ ತೊಂದರೆಯಾಗಲಿದೆ ಎಂದರು.
ಬಾಲಸುಬ್ರಹ್ಮಣ್ಯ ಸಮಿತಿಯ ವರದಿ ಜಾರಿಗೊಳಿಸ ಬೇಕೆಂದು ಈ ಹಿಂದೆ ಒತ್ತಾಯಿಸುತ್ತಿದ್ದ ಕಾಂಗ್ರೆಸ್ ಲೋಕಸಭೆ ಚುನಾವಣೆ ಗೆದ್ದ ನಂತರ ಅದನ್ನು ರದ್ದುಪಡಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆ.ಪಿ.ಸಂಪತ್ಕುಮಾರ್, ಹೋಬಳಿ ಘಟಕದ ಅಧ್ಯಕ್ಷ ಎಚ್.ಎಂ.ಮನು, ಪ್ರಧಾನ ಕಾರ್ಯದರ್ಶಿಗಳಾದ ವೈ.ಎಸ್.ಗಣೇಶ್, ಎಸ್.ಗೋಪಾಲ್, ಪಟ್ಟಣ ಪಂಚಾಯಿತಿ ಸದಸ್ಯ ಆರ್.ರಾಜಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.