ADVERTISEMENT

ಅರ್ಥಶಾಸ್ತ್ರಜ್ಞ ಕೃಷ್ಣಯ್ಯಗೌಡ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2011, 9:10 IST
Last Updated 11 ಫೆಬ್ರುವರಿ 2011, 9:10 IST

ನರಸಿಂಹರಾಜಪುರ: ಇದೇ ಶನಿವಾರ  ತಾಲ್ಲೂಕಿನ ಮಡಬೂರು ಗ್ರಾಮದಲ್ಲಿ ನಡೆಯುವ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತಾಲ್ಲೂಕಿನ ಆಡುವಳ್ಳಿ ಗ್ರಾಮದ ವಾಸಿ ಅರ್ಥಶಾಸ್ತ್ರ ಲೇಖಕ ಡಾ.ಎಚ್.ಆರ್.ಕೃಷ್ಣಯ್ಯಗೌಡ ಆಯ್ಕೆಯಾಗಿದ್ದಾರೆ.

1956ರಲ್ಲಿ ಆಡುವಳ್ಳಿ ಗ್ರಾಮದ ಹಕ್ಕಲು ಮನೆ ಪಟೇಲ್ ರಂಗಪ್ಪ ಗೌಡ ಮತ್ತು ಗಿರಿಜಮ್ಮ ದಂಪತಿ ಪುತ್ರನಾಗಿ ಜನಿಸಿದ ಇವರು  ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಮುಗಿಸಿ 9ವರ್ಷಗಳ ಕಾಲ ಉಪನ್ಯಾಸಕರಾಗಿ 2ವರ್ಷಗಳ ಕಾಲ ಸಂಶೋಧನಾ ಸಹಾಯಕರಾಗಿ ರಾಜ್ಯದ ಅನೇಕ ಕಡೆಗಳಲ್ಲಿ ಕೆಲಸ ನಿರ್ವಹಿಸಿದರು.

1986ರಲ್ಲಿ ಕರ್ನಾಟಕ ಸಹಕಾರಿ ಸೇವೆಗೆ ಸೇರಿದ ಇವರು ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ,ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ, ಉಪನಿಬಂಧಕರಾಗಿ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾಗಿ, ಸಹಕಾರಿ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಗಿರಿಜನ ವಿವಿಧೋದ್ದೇಶ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿವೃದ್ಧಿ ಅರ್ಥಶಾಸ್ತ್ರ, ಗ್ರಾಮೀಣ ಅರ್ಥಶಾಸ್ತ್ರ ಮತ್ತು ಸಹಕಾರ ವಿಷಯದಲ್ಲಿ ವಿಶೇಷ ಅಧ್ಯಯನ ನಡೆಸಿರುವ ಇವರು ಅರ್ಥಶಾಸ್ತ್ರಕ್ಕೆ ಸಂಬಂಧ ಪಟ್ಟ 80ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಭಾರತದಲ್ಲಿ ದೊಡ್ಡ ಪ್ರಮಾಣದ ಆದಿವಾಸಿ ಸಹಕಾರ ಸಂಘಗಳ ಕಾರ್ಯನಿರ್ವಹಣೆಯ ಮೇಲೆ ಒಂದು ಅಧ್ಯಯನ ಎಂಬ ವಿಷಯದಲ್ಲಿ ಮಹಾ ಪ್ರಬಂಧ ಮಂಡಿಸಿ ಪಿಎಚ್‌ಡಿ ಪಡೆದಿದ್ದಾರೆ. ಸ್ವಸಹಾಯ ಗುಂಪುಗಳ ರಚನೆ ಮತ್ತು ಅಭಿವೃದ್ಧಿಯ ಬಗ್ಗೆ ರಾಜ್ಯದಾದ್ಯಂತ ಪ್ರವಾಸ ಮಾಡಿ ಆಂದೋಲನದ ಮಾರ್ಗದರ್ಶಿಯಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.