ಚಿಕ್ಕಮಗಳೂರು: ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ 2013–-14 ಹಾಗೂ ಗಿರಿಜನ ಉಪಯೋಜನೆ 2013–-14ರ ಅಡಿಯಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ವಾರ್ತಾ ಇಲಾಖೆ ಲ್ಯಾಪ್ಟಾಪ್, ಡಿಜಿಟಲ್ ಕ್ಯಾಮೆರಾ ವಿತರಿಸುವ ಯೋಜನೆ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ ಪತ್ರಿಕೋದ್ಯಮ, ಸಮೂಹ ಸಂವಹನ, ವಿದ್ಯುನ್ಮಾನ ಮಾಧ್ಯಮ ಅಧ್ಯಯನ ವಿಷಯಗಳಲ್ಲಿ ಪೂರ್ಣಾವಧಿ ಪದವಿ ಅಥವಾ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದು ಮೊದಲ ಸೆಮಿಸ್ಟ್ರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಹಾಗೂ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ, ಪತ್ರಿಕೋದ್ಯಮ ಐಚ್ಛಿಕ ವಿಷಯವನ್ನಾಗಿ ನೀಡುವ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ದೂರಶಿಕ್ಷಣ ಅಥವಾ ಡಿಪ್ಲೊಮ ವ್ಯಾಸಂಗ ಮಾಡುತ್ತಿರುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
ಅರ್ಹ ವಿದ್ಯಾರ್ಥಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡವಾರು ವಿವರಗಳೊಂದಿಗೆ ಪಟ್ಟಿಯನ್ನು ಸಂಬಂಧಿಸಿದ ವಿಶ್ವವಿದ್ಯಾನಿಲಯದ ವಿಭಾಗ ಮುಖ್ಯಸ್ಥರು ಅಥವಾ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರಿಂದ ಪಡೆದು ಸಲ್ಲಿಸಬೇಕು. ವಿದ್ಯಾರ್ಥಿಗಳಿಂದ ನೇರವಾಗಿ ಅರ್ಜಿ ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.