ಕಳಸ: ಕೇಂದ್ರ ಸರ್ಕಾರವು ಅಡಿಕೆ ಹಾನಿಕಾರಕ ಪದಾರ್ಥ ಎಂದು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಮಾಹಿತಿಯನ್ನು ಹಿಂದೆ ಪಡೆದು ಅಡಿಕೆ ಬೆಳೆಗಾರರ ರಕ್ಷಣೆಗೆ ಧಾವಿಸಬೇಕು ಎಂದು ಇಲ್ಲಿನ ಬಿಜೆಪಿ ಘಟಕ ಒತ್ತಾಯಿಸಿದೆ.
ದೇಶದ ಅನೇಕ ರಾಜ್ಯಗಳಲ್ಲಿ ಇರುವ ಲಕ್ಷಾಂತರ ಸಂಖ್ಯೆಯ ಸಾಂಪ್ರದಾಯಿಕ ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಸರ್ಕಾರ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಹೋಬಳಿ ಬಿಜೆಪಿ ಅಧ್ಯಕ್ಷ ನಾಗೇಶ್ ಭಟ್ ಕಲ್ಲುಕುಡಿಗೆ, ಪ್ರಧಾನ ಕಾರ್ಯದರ್ಶಿ ರಂಗನಾಥ್ ಕಚಗಾನೆ, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಕೆಳಭಾಗ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಸಣ್ಣ ಮತ್ತು ಮಧ್ಯಮ ವರ್ಗದ ಬೆಳೆಗಾರರು ಕೃಷಿ ಮಾಡಿರುವ ಸರ್ಕಾರಿ ಭೂಮಿಯ ಒಡೆತನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಆ ರೈತರಿಗೇ ನೀಡಬೇಕು ಎಂದೂ ಇದೇ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ಈವರೆಗೆ ಅರಣ್ಯ ಇಲಾಖೆಯು ರೈತರಿಂದ ವಶಪಡಿಸಿಕೊಂಡಿರುವ ಜಮೀನು ಪಾಳು ಬಿದ್ದಿದೆ.
ಆದರೆ ರೈತರು ಸಾಗುವಳಿ ಮಾಡಿರುವ ಭೂಮಿ ಹಸಿರಿನಿಂದ ನಳನಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ ಭೂಮಿ ವಶಪಡಿಸಿಕೊಳ್ಳುವ ಪ್ರಯತ್ನ ವನ್ನು ಸರ್ಕಾರ ಮಾಡಬಾರದು ಎಂದು ಒತ್ತಾಯಿಸಿದರು.
ಪಕ್ಷದ ಮುಖಂಡರಾದ ಜಯಂತ್ ಹಿರೇಬೈಲ್, ಪ್ರಕಾಶ್ ಹೆರಟೆ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.