ADVERTISEMENT

`ಗುತ್ತಿಗೆ ರದ್ದುಗೊಳಿಸಿ, ಕಾಯಂ ನೌಕರರನ್ನು ನೇಮಿಸಿ'

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2012, 9:43 IST
Last Updated 20 ಡಿಸೆಂಬರ್ 2012, 9:43 IST

ಮೂಡಿಗೆರೆ: ದೇಶದ ಎ್ಲ್ಲಲ ಸರ್ಕಾರಿ ಇಲಾಖೆಗಳಲ್ಲಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಕ ಮಾಡಿಕೊಳ್ಳುವುದನ್ನು ತಕ್ಷಣದಿಂದಲೇ ರದ್ದುಗೊಳಿಸಿ, ಆ ಸ್ಥಾನಗಳಿಗೆ ಕಾಯಂ ನೌಕರರನ್ನು ನೇಮಕ ಮಾಡಿ, ಉದ್ಯೋಗದ ಭದ್ರತೆಯನ್ನು ನೀಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಹ ಕಾರ್ಯದರ್ಶಿ ಸಾತಿ ಸುಂದರೇಶ್ ಒತ್ತಾಯಿಸಿದರು.

ಪಟ್ಟಣದಲ್ಲಿ ಎ.ಐ.ಟಿ.ಯು.ಸಿ. ಸಂಘಟನೆಯ ಕಾರ್ಯಕರ್ತರು ಬುಧವಾರ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನಸಾಮಾನ್ಯರ ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ಅಸಂಘಟಿತ ಕಾರ್ಮಿಕರ ಬದುಕು ದುಸ್ತರವಾಗಿದೆ. ಇಂತಹ ಸಂದರ್ಭ ದೆಹಲಿಯ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು, ಆರು ಜನಗಳಿರುವ ಕುಟುಂಬವೊಂದಕ್ಕೆ ಜೀವನ ನಿರ್ವಹಣೆಗೆ ತಿಂಗಳಿಗೆ 600 ರೂಪಾಯಿಗಳು ಸಾಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿರುವುದು ಹಾಸ್ಯಾಸ್ಪದವಾಗಿದೆ. ರಾಜಕೀಯ ವ್ಯಕ್ತಿಗಳು ಸಾಮಾನ್ಯ ಜನರ ಬಗ್ಗೆ ಮಾತನಾಡುವಾಗ ಚಿಂತಿಸಬೇಕಾದ ಅಗತ್ಯವಿದೆ ಎಂದರು. ಈಗ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಆರು ಸಿಲಿಂಡರ್‌ಗಳ ವ್ಯವಸ್ಥೆಯಡಿಯಲ್ಲಿ ರಾಜಕೀಯ ವ್ಯಕ್ತಿಗಳು ಜೀವನ ನಡೆಸುತ್ತಾರೆಯೇ ಎಂದು ಪ್ರಶ್ನಿಸಿದರು.

ತೋಟ ಕಾರ್ಮಿಕರ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಓಬಯ್ಯ ಮಾತನಾಡಿ, ತೋಟದ ಕಾರ್ಮಿಕರಿಗೆ ದಿನ ಒಂದಕ್ಕೆ 195 ರೂಪಾಯಿ ವೇತನವನ್ನೂ, 4 ಪೈಸೆ ತುಟ್ಟಿಭತ್ಯೆಯನ್ನು ನೀಡಬೇಕು ಎಂದು ಕೇಂದ್ರ ಸರ್ಕಾರವು ನಿಯಮ ರೂಪಿಸಿದ್ದರೂ, ರಾಜ್ಯಸರ್ಕಾರ ಆ ನಿಯಮವನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಅಸಂಘಟಿತ ಕಾರ್ಮಿಕರು, ಉದ್ಯೋಗ ಭದ್ರತೆ, ಭದ್ರತೆಯಿಲ್ಲದ ಭವಿಷ್ಯದ ಯೋಜನೆಗಳಿಂದ ನರಳುವಂತಾಗಿದೆ ಎಂದರು.

ಪ್ರತಿಭಟನೆಯಲ್ಲಿ ಭಾರತ ಕಮುನಿಸ್ಟ್ ಪಕ್ಷದ ಪದಾಧಿಕಾರಿಗಳಾದ  ಬಿ.ಕೆ.ಲಕ್ಷ್ಮಣ್ ಕುಮಾರ್, ಬಾಳೂರು ರಮೇಶ್, ಎನ್.ಸಿ. ಓಬಯ್ಯ, ಕೆಳಗೂರು ರಮೇಶ್, ಅಬ್ದುಲ್ ಜಬ್ಬಾರ್, ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮೂರ್ತಿ, ಬಾಬಣ್ಣ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.