ಚಿಕ್ಕಮಗಳೂರು: ಡೆಂಗೆ ಜ್ವರದಿಂದ ಸಾವನ್ನಪ್ಪಿದ ಗುಣಸಾಗರದ ಯುವಕನ ಮನೆಗೆ ಆರೋಗ್ಯ ಸಚಿವ ಯ.ಟಿ ಖಾದರ್ ಮಂಗಳವಾರ ರಾತ್ರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಕಡೂರು ತಾಲ್ಲೂಕಿನ ದೇವನೂರು ಸಮೀಪದ ಗುಣಸಾಗರ ನಿವಾಸಿ ಲಕ್ಷ್ಮಣ (27) ಎಂಬಾತ ಡೆಂಗೆಯಿಂದ ಸಾವನ್ನಪ್ಪಿದ್ದು, ಸಚಿವರು ಗ್ರಾಮದಲ್ಲಿ ಮೃತನ ಪತ್ನಿ, ತಾಯಿ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಮೃತನ ಕುಟುಂಬದವರಿಗೆ ಪರಿಹಾರ ನೀಡಲು ಅನುಕೂಲವಾಗುವಂತೆ ಕೂಡಲೇ ಸರ್ಕಾರಕ್ಕೆ ವರದಿ ಕಳುಹಿಸುವಂತೆ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಮಾತನಾಡಿದ ಯು.ಟಿ.ಖಾದರ್, ಯಾವುದೇ ಜ್ವರದ ಲಕ್ಷಣ ಕಂಡುಬಂದಲ್ಲಿ ರಕ್ತದ ಪರೀಕ್ಷೆ ನಡೆಸಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ವಿಳಂಬ ಮಾಡದೆ ಉನ್ನತ ಆಸ್ಪತ್ರೆಗಳಿಗೆ ಕಳುಹಿಸಬೇಕು. ಆಶಾ ಕಾರ್ಯಕರ್ತೆಯರನ್ನು ಮನೆಮನೆ ಸಮೀಕ್ಷೆ ಕಾರ್ಯ ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಸಾಂಕ್ರಾಮಿಕ ರೋಗ ಪೀಡಿತರ ಮಾಹಿತಿ ಆರೋಗ್ಯ ಇಲಾಖೆಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು. ರೋಗ ಪೀಡಿತರನ್ನು ಅನಗತ್ಯವಾಗಿ ಬೇರೆ ಜಿಲ್ಲೆಗಳಿಗೆ ಚಿಕಿತ್ಸೆಗೆ ಕಳುಹಿಸದಂತೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಮೃತನ ಪತ್ನಿಗೆ ಸೂಕ್ತ ಉದ್ಯೋಗ ದೊರಕಿಸಿಕೊಡಲು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಗುಣಸಾಗರ ಗ್ರಾಮಸ್ಥರೊಂದಿಗೆ ಸಮಾಲೋಚಿಸಿದ ಸಚಿವರ ಖಾದರ್, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ಮನವಿ ಮಾಡಿದರು. ಯಾವುದೇ ಜ್ವರದ ಲಕ್ಷಣ ಕಂಡುಬಂದಲ್ಲಿ, ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬೇಕು, ಕುಡಿಯುವ ನೀರನ್ನು ಶುದ್ಧೀಕರಿಸಿ ಕುಡಿಯಬೇಕು ಎಂದು ತಿಳಿಸಿದರು.
ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ವಿಳಂಬ ಸಹಿಸುವುದಿಲ್ಲ. ಯಾವುದೇ ರೀತಿ ರಾಜಿಯಾಗುವುದಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.