ADVERTISEMENT

ನಿವೇಶನ ರಹಿತರ ಪಟ್ಟಿ ತಾರತಮ್ಯ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2012, 10:16 IST
Last Updated 19 ಡಿಸೆಂಬರ್ 2012, 10:16 IST

ಮೂಡಿಗೆರೆ: ತಾಲ್ಲೂಕಿನ ಕೂವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರ ಪಟ್ಟಿ ತಯಾರಿಕೆಯಲ್ಲಿ ತಾರತಮ್ಯವೆಸಗಲಾಗಿದೆ ಎಂದು ಆರೋಪಿಸಿ ಮಂಗಳವಾರ ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ನಿವೇಶನ ರಹಿತರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ಮುತ್ತಿಗೆಯಲ್ಲಿ ಭಾಗವಹಿಸಿದ್ದ ಭಾರತ ಕಮುನಿಸ್ಟ್ ಪಕ್ಷದ ರಾಜ್ಯ ಸಹ ಕಾರ್ಯದರ್ಶಿ ಸಾತಿ ಸುಂದರೇಶ್ ನಿವೇಶನ ರಹಿತರನ್ನು ಉದ್ದೇಶಿಸಿ ಮಾತನಾಡಿ, ನಾವು ರಾಜಕೀಯ ನಡೆಸಲು ಹೋರಾಟ ನಡೆಸುತ್ತಿಲ್ಲ. ಬದಲಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರ ನ್ಯಾಯಕ್ಕಾಗಿ ಹೋರಾಟ ನಡೆಸಲಾಗುತ್ತಿದೆ. ಈ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ರಹಿತರ ಪಟ್ಟಿ ತಯಾರಿಕೆಯಲ್ಲಿ, ನಿಜವಾದ ನಿವೇಶನ ರಹಿತರನ್ನು ಪಟ್ಟಿಯಿಂದ ಹೊರಗಿಟ್ಟು, ವಸತಿ ವ್ಯವಸ್ಥೆಯಿರುವ ರಾಜಕೀಯ ಬೆಂಬಲಿಗರ ಹೆಸರನ್ನು ನಿವೇಶನ ರಹಿತರ ಪಟ್ಟಯಲ್ಲಿ ಸೇರಿಸಲಾಗಿದೆ ಎಂದು ಆರೋಪಿಸಿದರು.

ಸುಮಾರು 7ಕಿ.ಮೀ ದೂರದಿಂದ ಕೂವೆ ಗ್ರಾಮ ಪಂಚಾಯಿತಿಯವರೆಗೆ ಕಾಲ್ನಡಿಗೆಯಲ್ಲಿ ಜಾಥಾ ನಡೆಸಿದ ನಿವೇಶನ ರಹಿರತರು, ಕೂವೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ನಂತರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ, ಈಗ ರಚಿಸಿರುವ ನಿವೇಶನ ರಹಿತರ ಪಟ್ಟಿಯನ್ನು ರದ್ದುಗೊಳಿಸಿ ನೂತನ ಪಟ್ಟಿಯನ್ನು ರಚಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರರು ತಾವೇ ಖುದ್ದಾಗಿ ಪಟ್ಟಯನ್ನು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ಸಿಪಿಐ ಪದಾಧಿಕಾರಿಗಳಾದ ಬಿ.ಕೆ.ಲಕ್ಷ್ಮಣ್ ಕುಮಾರ್, ಎಂ.ಎಸ್.ಹರೀಶ್, ದೇವರುಂದ ರವಿಕುಮಾರ್, ಎನ್.ಗೋಪಾಲಶೆಟ್ಟಿ, ಗಣೇಶ್ ಆಚಾರ್ಯ, ಗುಂಡಣ್ಣ, ಸುನೀಲ್, ರಮೇಶ್ ಕೆಳಗೂರು, ಗಣೇಶ್, ಸುಂದರ್, ಪುಷ್ಪಾ, ಕೃಷ್ಣಪ್ಪ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.