ADVERTISEMENT

ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಜೂನ್ 2011, 9:50 IST
Last Updated 21 ಜೂನ್ 2011, 9:50 IST

ನರಸಿಂಹರಾಜಪುರ: ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದಕರ ಒಕ್ಕೂಟ ನಿರ್ಮಿಸಬೇಕೆಂದು ಒತ್ತಾಯಿಸಿ ಸೋಮವಾರ ತಾಲ್ಲೂಕಿನ ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ಮನವಿಯಲ್ಲಿ ಜಿಲ್ಲೆಯ ಮಲೆನಾಡು, ಅರೆಮಲೆ ನಾಡು ಹಾಗೂ ಬಯಲು ಸೀಮೆ ಪ್ರದೇಶ ಒಳಗೊಂಡಿದೆ. ಜಿಲ್ಲೆಯ ಶೇಕಡ 75 ರಷ್ಟು ಜನರು ಪ್ರಮುಖ ವೃತ್ತಿಯಾಗಿ ಕೃಷಿ ಮತ್ತು ಹೈನುಗಾರಿಗೆ ಅವಲಂಬಿಸಿದ್ದಾರೆ.

ಕೃಷಿಕರಿಗೆ ಕೃಷಿ ಚಟುವಟಿಕೆಗೆ ಹಸು ಸಾಕಣೆ ಅಗತ್ಯವಾಗಿದೆ. ಆದರೆ ಹಾಲಿನ ವಿಲೇವಾರಿಗೆ ಸರಿಯಾದ ವ್ಯವಸ್ಥೆ ಇಲ್ಲದೇ ಇರುವುದರಿಂದ ಕೃಷಿಕರಿಗೆ ಹಸು ಸಾಕಾಣಿಕೆಯಲ್ಲಿ ನಷ್ಟ ಉಂಟಾಗುತ್ತಿದೆ. ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಹಾಸನ ಹಾಲು ಉತ್ಪಾದಕರ ಒಕ್ಕೂಟದ ಕೆಲವು ಹಾಲಿನ ಸೊಸೈಟಿ ಗಳಿದ್ದು ಇದರಿಂದ ರೈತರಿಗೆ ಹೈನುಗಾರಿಕೆಗೆ ಪ್ರಯೋ ಜನವಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 16ಸಾವಿರ ಸ್ವಸಹಾಯ ಮತ್ತು ಸ್ತ್ರೀಶಕ್ತಿ ಸಂಘಗಳಲ್ಲಿ ಒಂದು ಲಕ್ಷಕ್ಕಿಂತಲೂ ಅಧಿಕ ಮಹಿಳಾ ಸದಸ್ಯರಿದ್ದು ಹೈನುಗಾರಿಕೆ ಯನ್ನು ಕೈಗೊಂಡಿದ್ದಾರೆ.

ಹಾಗಾಗಿ ಹಾಲು ವಿಲೇವಾರಿಗಾಗಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅವಶ್ಯಕತೆ ಇದೆ. ಸಹಕಾರ ಸಂಘ ರಚಿಸಲು ಜಿಲ್ಲೆಗೆ ಪ್ರತ್ಯೇಕವಾಗಿ ಹಾಲು ಉತ್ಪಾದಕರ ಒಕ್ಕೂಟದ ರಚನೆಯಾಗಬೇಕು. ಜಿಲ್ಲೆಯಲ್ಲಿ ಪ್ರತಿನಿತ್ಯ ಸರಾಸರಿ 5ಲಕ್ಷ ಲೀಟರ್ ಹಾಲು  ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದಕರ ಒಕ್ಕೂಟ ರಚಿಸಿದಲ್ಲಿ ಇನ್ನೂ ಹೆಚ್ಚಿನ ಹಾಲಿನ ಉತ್ಪಾದನೆಯಾಗುತ್ತದೆ.

ಕಳೆದ 3ವರ್ಷ ಗಳಿಂದಲೂ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ರಚಿಸುವಂತೆ ಸರ್ಕಾರ ಮತ್ತು ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರು ಪ್ರಯೋಜನವಾಗಿಲ್ಲ.

ಹಾಗಾಗಿ ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದಕರ ಒಕ್ಕೂಟ ರಚಿಸ ಬೇಕು.ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಿವಿಧ ಸ್ವಸಹಾಯ ಸಂಘಗಳ ಒಕ್ಕೂಟದ ಹೇಮಲತಾ, ಉಮೇಶ್, ವೀರೇಶ್, ಎನ್.ಎಂ.ಕಾಂತ ರಾಜ್,ಆರ್.ಸತೀಶ್, ತಾಲ್ಲೂಕಿನ ಎಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.