ಶೃಂಗೇರಿ: ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ತಡೆಗಟ್ಟಲು ಕೇಂದ್ರ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ಜನತೆ ಕೇಂದ್ರ ಸರ್ಕಾರವನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಸಂದೇಶವನ್ನು ಮಾ.18ರ ಲೋಕಸಭಾ ಉಪಚುನಾವಣೆಯಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಸುನೀಲ್ ಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪಟ್ಟಣದ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಅವರು ಮಾತನಾಡಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಶಕ್ತಿಯುತವಾಗಿದ್ದು, ಪಕ್ಷದ ಪದಾಧಿಕಾರಿಗಳು ಮತ್ತು ಬೂತ್ ಕಮಿಟಿಯ ಕಾರ್ಯಕರ್ತರು ಸಕ್ರಿಯರಾಗಿದ್ದಾರೆ. ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯ ಗೆಲುವಿಗೆ ಪೂರಕ ಎಂದರು.
ಶೃಂಗೇರಿ ಕ್ಷೇತ್ರದ ಮಟ್ಟಿಗೆ ಶಾಸಕ ಡಿ.ಎನ್. ಜೀವರಾಜ್ ಸರ್ಕಾರಿ ಯೋಜನೆಗಳ ಲಾಭವನ್ನು ಕ್ಷೇತ್ರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಮತಯಾಚನೆಗೆ ಅನುಕೂಲಕರವಾಗಿದೆ ಎಂದರು.
ಕಾಂಗ್ರೆಸ್ ಮತ್ತು ಜೆ.ಡಿ.ಎಸ್. ಪಕ್ಷದಿಂದ ಹಲವಾರು ಮುಖಂಡರು ಬಿ.ಜೆ.ಪಿ. ಸೇರುತ್ತಿದ್ದು, ಶೃಂಗೇರಿಯಲ್ಲೂ ಸಹ ಡಿ.ಸಿ.ಸಿ. ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎಂ. ಶ್ರಿನಿವಾಸ್, ಕಾಂಗ್ರೆಸ್ನ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಡಿ.ಸಿ. ಶಂಕರಪ್ಪ, ನೆಮ್ಮೋರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಪ್ಪ, ಕೆಸಗೋಡು ಸುಬ್ಬರಾವ್ ಸೇರಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಿ. ಶಿವಶಂಕರ್, ಪಕ್ಷದ ತಾಲ್ಲೂಕು ಘಟಕ ಅಧ್ಯಕ್ಷ ಎ.ಎಸ್. ನಯನ, ಶ್ರಿಧರ್ರಾವ್, ಚೇತನ್ಹೆಗ್ಡೆ ಮತ್ತಿತರರು ಇದ್ದರು.
`ಯೋಜನೆ ಶ್ರೀರಕ್ಷೆ~
ತರೀಕೆರೆ: ರಾಜ್ಯ ಸರ್ಕಾರದ ನಾಲ್ಕುವರ್ಷದ ಸಾಧನೆಗಳಾದ ಸಂಧ್ಯಾ ಸುರಕ್ಷಾ, ಉಚಿತ ಸೈಕಲ್ ವಿತರಣೆ ಸೇರಿದಂತೆ ಹಲವು ಯೋಜನೆಗಳು ಶ್ರೀರಕ್ಷೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ವಿ.ಸುನೀಲ್ಕುಮಾರ್ ಹೇಳಿದರು.
ತಾಲ್ಲೂಕಿನ ದೊರನಾಳು ಗ್ರಾಮದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಶಾಸಕ ಡಿ.ಎಸ್.ಸುರೇಶ್ ಮಾತನಾಡಿ ಕ್ಷೇತ್ರದಲ್ಲಿ ನಡೆಸಿರುವ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಜನರ ಬಳಿ ಮತ ಕೇಳಲಿದ್ದೇವೆ. ಲಿಂಗದಹಳ್ಳಿ ಹೋಬಳಿಯಲ್ಲಿ ರೂ.30 ಕೋಟಿ ವೆಚ್ಚದಲ್ಲಿ ಕೆಮ್ಮಣ್ಣುಗುಂಡಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.