ADVERTISEMENT

ಮುಖ್ಯಮಂತ್ರಿಗೆ ಕಾಂಗ್ರೆಸ್ ಕಪ್ಪುಬಾವುಟ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 9:55 IST
Last Updated 14 ಸೆಪ್ಟೆಂಬರ್ 2011, 9:55 IST

ತರೀಕೆರೆ: ಭದ್ರಾ ಮೇಲ್ದಂಡೆ ಯೋಜನೆ ವಿರೋಧಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಮಂಗಳವಾರ  ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ವಿರುದ್ಧ ಕಪ್ಪು ಬಾವುಟ ಪ್ರದರ್ಶನವನ್ನು ಪೊಲೀಸರು ವಿಫಲಗೊಳಿಸಿ ಪ್ರತಿಭಟನಾಕಾರರನ್ನು ಬಂಧಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ವೈಜ್ಞಾನಿಕವಾಗಿ ಜಾರಿಗೊಳಿಸಬೇಕು, ಯೋಜನೆಯಲ್ಲಿ ನಡೆದಿರುವ ಅವ್ಯವಹಾರವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ತಾಲ್ಲೂಕಿನಲ್ಲಿ ಸಂಕಷ್ಟದಲ್ಲಿರುವ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಲು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕರೆ ನೀಡಿತ್ತು.

ಕಾರ್ಯಕರ್ತರು ಮತ್ತು ಮುಖಂಡರು ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸುತ್ತಿದ್ದಂತೆ ಸುತ್ತುವರೆದ ಪೊಲೀಸರು ಅವರನ್ನು ಪಟ್ಟಣದ ಎಂ.ಜಿ.ಹಾಲ್‌ನಲ್ಲಿ ಬಂಧಿಸಿಟ್ಟು ನಂತರ ವೈಯುಕ್ತಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್.ಮೂರ್ತಿ, ಕೆಪಿಸಿಸಿ ಸದಸ್ಯ ಟಿ.ವಿ.ಶಿವಶಂಕರಪ್ಪ, ಮಾಜಿ ಶಾಸಕ ಎಸ್.ಎಂ.ನಾಗರಾಜ್, ನೀಲಕಂಠಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್‌ಘನಿ ಅನ್ವರ್, ಕೆ.ಆರ್.ದ್ರುವ ಕುಮಾರ್, ಮುಖಂಡರಾದ ಆರ್.ಮಂಜು ನಾಥ್, ಜಿ.ಎಚ್.ಶ್ರೀನಿವಾಸ್, ಲೋಕೇಶ್ ಮತ್ತು ಮಂಜೇಗೌಡ ಬಂಧಿತರಲ್ಲಿ ಇದ್ದರು.

ಕಾರ್ಯಕರ್ತರ ಬಂಧನ
ಕೊಪ್ಪ:
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು  ಮುಖ್ಯಮಮತ್ರಿ ಡಿ.ವಿ.ಸದಾನಂದಗೌಡರ ವಿರುದ್ಧ ಕಪ್ಪುಬಾವುಟ ಪ್ರದರ್ಶನಕ್ಕೆ ತರೀಕೆರೆಗೆ ತೆರಳುತ್ತಿದ್ದ 15 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು.

ಯುವಕಾಂಗ್ರೆಸ್ ಮುಖಂಡ ಸಚಿನ್ ಮೀಗ, ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಝಾದರ್, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಹಂಚಿಕೊಳಲು ದಿನೇಶ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಹರೀಶ್ ಭಂಡಾರಿ ಯುವ ಮುಖಂಡ ಆದಿಲ್ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಠಾಣಾಧಿಕಾರಿ ಮಹೇಶ್  ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.