ADVERTISEMENT

ರೈತರ ಸಾಲ ಮನ್ನಾಕ್ಕೆ ಆಗ್ರಹ

ರೈತ ಸಂಘ– ಹಸಿರುಸೇನೆ ಜಿಲ್ಲಾ ಘಟಕದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2018, 12:15 IST
Last Updated 19 ಜೂನ್ 2018, 12:15 IST
ರಾಜ್ಯ ರೈತ ಸಂಘ–ಹಸಿರು ಸೇನೆ ಜಿಲ್ಲಾ ಘಟಕದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯ ರೈತ ಸಂಘ–ಹಸಿರು ಸೇನೆ ಜಿಲ್ಲಾ ಘಟಕದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.   

ಚಿಕ್ಕಮಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡಲು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ–ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಜಮಾಯಿಸಿದ ರೈತರು ಸಾಲಮನ್ನಾಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ರಾಜ್ಯ ರೈತಸಂಘ–ಹಸಿರು ಸೇನೆ ಜಿಲ್ಲಾ ಘಟಕದ ಮುಖಂಡ ಕೆ.ಕೆ.ಕೃಷ್ಣಗೌಡ ಮಾತನಾಡಿ, ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೇ 30 ರಂದು ರೈತರ ಸಭೆ ನಡೆಸಿ ಸಾಲಮನ್ನಾ ಕುರಿತು ಚರ್ಚಿಸಿದ್ದರು. 15 ದಿನಗಳೊಳಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ಸಾಲಮನ್ನಾ ಘೋಷಣೆಗೆ ವಿಳಂಬನೀತಿ ಅನುಸರಿಸುತ್ತಿದ್ದಾರೆ’ ಎಂದು ದೂಷಿಸಿದರು.

ADVERTISEMENT

‘ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಗಳಲ್ಲಿ ರೈತರ ಎಲ್ಲ ಸಾಲಮನ್ನಾ ಮಾಡಲು ಕ್ರಮ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಚುನಾವಣೆ ಪೂರ್ವದಲ್ಲಿ ಮಾತು ನೀಡಿದ್ದರು. ಆ ಮಾತಿನಂತೆ ನಡೆದುಕೊಳ್ಳಬೇಕು. ಸಾಲಮನ್ನಾ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಬೊಟ್ಟು ಮಾಡುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಹಾಲಿನ ಪ್ರೋತ್ಸಾಹಧನ ₹ 2 ಇಳಿಕೆ ಮಾಡಿರುವ ಆದೇಶವನ್ನು ವಾಪಸ್‌ ಪಡೆಯಬೇಕು. ರೈತರ ಹಿತ ಕಾಯಬೇಕು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ. ರೈತರು ಒಗ್ಗಟ್ಟಾಗಿ ಹೋರಾಟ ಮಾಡಬೇಕ ಎಂದು ಎಚ್ಚರಿಸಿದರು.

ರೈತ ಸಂಘ–ಹಸಿರು ಸೇನೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಎ.ಮಂಜುನಾಥ್‌, ಜಿಲ್ಲಾಧ್ಯಕ್ಷ ಎಂ.ಸಿ.ಬಸವರಾಜ್‌ ಇದ್ದರು.

ತಕ್ಷಣ ರೈತರ ಸಾಲಮನ್ನಾಕ್ಕೆ ಕ್ರಮಕೈಗೊಳ್ಳದ್ದಿರೆ <br/>ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು
- ಕೆ.ಕೆ.ಕೃಷ್ಣಗೌಡ, ರೈತಸಂಘ–ಹಸಿರು ಸೇನೆ ಜಿಲ್ಲಾ ಘಟಕದ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.