ADVERTISEMENT

ವಿದ್ಯಾರ್ಥಿನಿಲಯ ಸುಧಾರಣೆಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 6:02 IST
Last Updated 7 ಸೆಪ್ಟೆಂಬರ್ 2013, 6:02 IST

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಸುಧಾರಣೆಗೆ ಒತ್ತಾಯಿಸಿ ಶುಕ್ರವಾರ ನಗರದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆಗೆ ತಕ್ಕಂತೆ ತಿಂಗಳ ಊಟದ ಖರ್ಚು ಹೆಚ್ಚಿಸಬೇಕು. ಪ್ರತಿ ವರ್ಷ ವಿದ್ಯಾ ರ್ಥಿಗಳ ಸಂಖ್ಯೆ ಅಧಿಕಗೊಳ್ಳುತ್ತಿದ್ದು, ಹೆಚ್ಚುವರಿ ಕೊಠಡಿ ನಿರ್ಮಿಸುವುದು, ಹಾಸ್ಟೆಲ್‌ಗಳಲ್ಲಿ ತಲೆದೋರಿರುವ ಸಮಸ್ಯೆಗಳನ್ನು ಬಗೆಹರಿಸಲು ಇಲಾಖೆ ಅಧಿಕಾರಿ ಗಳು ಮುಂದಾಗಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಹೆಚ್ಚುವರಿ ಹಾಸ್ಟೆಲ್‌ಗಳನ್ನು ಆರಂಭಿಸಬೇಕು. ಬಹುತೇಕ ಕಟ್ಟಡಗಳು ಬಾಡಿಗೆಯಲ್ಲಿ ನಡೆಯುತ್ತಿವೆ. ಕೂಡಲೇ ಸ್ವಂತ ಕಟ್ಟಡ ನಿರ್ಮಿಸಲು ಸರ್ಕಾರ ಮುಂದಾಗಬೇಕು. ಕಾಯಂ ನಿಲಯ ಪಾಲಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಅಗತ್ಯ ಟೇಬಲ್, ಖುರ್ಚಿ, ಯುಪಿಎಸ್, ಕಂಪ್ಯೂಟರ್, ಗ್ರಂಥಾಲಯ ಒದಗಿಸುವುದು, ಪಠ್ಯೇತರ ಚಟುವಟಿಕೆಗಳಿಗೆ ಪ್ರತ್ಯೇಕ ಅನುದಾನ ಬಿಡುಗಡೆಗೊಳಿಸಬೇಕು. ತಿಂಗಳಿಗೊಮ್ಮೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವುದು, ವಿದ್ಯಾರ್ಥಿನಿ ನಿಲಯಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು, ವರ್ಷಕ್ಕೆ ನಾಲ್ಕು ಬಾರಿ ಪೋಷಕರ ಸಭೆ ನಡೆಸಲು ಇಲಾಖೆ ಅಧಿಕಾರಿಗಳು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಬೇಕು, ಕಾಲೇಜಿಗೆ ಸಮೀಪವಿರುವ ಸ್ಥಳದಲ್ಲಿ ಹಾಸ್ಟೆಲ್ ತೆರೆಯಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದರು.

ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಸಿದಷ್ಟೂ ವಿದ್ಯಾರ್ಜನೆಗೆ ಅನುಕೂಲವಾಗುತ್ತದೆ. ಹಾಗಾಗಿ ಈ ಸೌಲಭ್ಯಗಳನ್ನು ನೀಡುವತ್ತ ಗಮನ ಹರಿಸಲು ಕೋರಿದರು. ಸಂಘಟನೆ ರಾಜ್ಯ ಕಾರ್ಯದರ್ಶಿ ಕೆ.ರಮೇಶ್, ಜಿಲ್ಲಾ ಹಾಸ್ಟೆಲ್ ಪ್ರಮುಖ್ ಜಿ.ರಂಗಸ್ವಾಮಿ, ನಗರ ಕಾರ್ಯದರ್ಶಿ ಮಳಲೂರು ಸಚಿನ್, ದಯಾನಂದ ತಿರುಗುಣ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.