ಶೃಂಗೇರಿ: ಸದಾನಂದಗೌಡರನ್ನು ಮುಖ್ಯಮಂತ್ರಿ ಸ್ಥಾನದಿಂದ ರಾಜೀನಾಮೆ ಕೊಡಿಸುತ್ತಿರುವ ಬಿಜೆಪಿ ಹೈಕಮಾಂಡ್ ಕ್ರಮ ಖಂಡಿಸಿ ತಾಲ್ಲೂಕು ಒಕ್ಕಲಿಗರ ವೇದಿಕೆ ವತಿಯಿಂದ ಮಂಗಳವಾರ ಪಟ್ಟಣದ ಪ್ರವೇಶ ದ್ವಾರದ ಬಳಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಎಚ್.ಎಂ. ರಾಜಶೇಖರ್, ಜಾತಿ ರಾಜಕಾರಣಕ್ಕೆ ಬಲಿಯಾಗುತ್ತಿರುವ ಮುಖ್ಯಮಂತ್ರಿ ಸದಾನಂದಗೌಡ ರಾಜ್ಯದ ಎಲ್ಲಾ ವರ್ಗದ ಜನತೆಯ ಒಳಿತಿಗಾಗಿ ಶ್ರಮಿಸಿದ್ದಾರೆ. ಕೇವಲ ಲಿಂಗಾಯತರ ಮನವೊಲಿಕೆಯ ಕಸರತ್ತಿನಲ್ಲಿ ಸದಾನಂದಗೌಡರನ್ನು ಬಲಿಪಶು ಮಾಡಲಾಗುತ್ತಿದೆ. ಯಾವುದೇ ರಾಜಕೀಯ ಪಕ್ಷಕ್ಕೂ ಇಂತಹ ಬೆಳವಣಿಗೆ ಶೋಭೆ ತರಲಾರದು. ಆದುದರಿಂದ ಯಾವುದೇ ಕಾರಣಕ್ಕೂ ಸದಾನಂದಗೌಡರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾವಡಿ ದೇವೆಂದ್ರ, ಮಾತೊಳ್ಳಿ ಸತೀಶ್, ಗಿಣಕಲ್ ಸುರೇಂದ್ರ, ಕೆ.ಎನ್. ಗೋಪಾಲಹೆಗ್ಡೆ, ಅಂಗುರುಡಿ ದಿನೇಶ್, ಮಂಜುನಾಥ್, ವಿಠ್ಠಲ ಹೆಗ್ಡೆ, ಜಿ.ಜಿ. ಮಂಜುನಾಥ್, ಎಸ್.ಕೆ. ಸತೀಶ್, ಕೆ.ಆರ್. ಉದಯಕುಮಾರ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.