ADVERTISEMENT

ಸಿ.ಎಂ ಸ್ಥಾನ ಗಿಟ್ಟಿಸಲು ಲಾಬಿ ಅನಿವಾರ್ಯ: ಕಾಗೋಡು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 6:02 IST
Last Updated 4 ಅಕ್ಟೋಬರ್ 2017, 6:02 IST
ಕಾಗೋಡು ತಿಮ್ಮಪ್ಪ
ಕಾಗೋಡು ತಿಮ್ಮಪ್ಪ   

ಚಿಕ್ಕಮಗಳೂರು: ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಲು ದೊಡ್ಡ ಪಕ್ಷಗಳಲ್ಲಿ ಪ್ರಸ್ತುತ ರಾಜಕಾರಣದಲ್ಲಿ ಲಾಬಿ ಮಾಡಬೇಕಿರುವುದು ಅನಿವಾರ್ಯ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರ ರೊಂದಿಗೆಮಾತನಾಡಿ, ‘ಲಾಬಿ ಮಾಡಿದ್ದರೆ ನಾನೂ ಮುಖ್ಯಮಂತ್ರಿ ಯಾಗಲು ಖಂಡಿತಾ ಸಾಧ್ಯ ಇತ್ತು. ತತ್ವ–ಸಿದ್ಧಾಂತ ಆಧಾರದಲ್ಲಿ ರಾಜಕಾರಣ ಮಾಡುತ್ತಿದ್ದೇನೆ. ಪಕ್ಷಕ್ಕೆ ಬದ್ಧನಾಗಿದ್ದೇನೆ.

ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿ ಸುವ ಕುರಿತು ಪಕ್ಷ ತೀರ್ಮಾನ ಕೈಗೊಳ್ಳಲಿದೆ’ ಎಂದರು. ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂದಿನ ಬಾರಿಯೂ ಪಕ್ಷ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯ ಸರ್ಕಾರವು ಬಗರ್‌ ಹುಕುಂ ಅರ್ಜಿಗಳ ಇತ್ಯರ್ಥ ನಿಟ್ಟಿನಲ್ಲಿ ಕ್ರಮವಹಿಸಿ, ಗೋಮಾಳ ಕಡಿಮೆ ಇದ್ದರೂ ಹಕ್ಕುಪತ್ರ ವಿತರಿಸಬೇಕು ಎಂದು ನಿಯಮಕ್ಕೆ ತಿದ್ದುಪಡಿ ಮಾಡಿತ್ತು. ಇದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ತಡೆಯಾಜ್ಞೆ ತೆರವು ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ’ ಎಂದರು.

‘ಡೀಮ್ಡ್‌ ಫಾರೆಸ್ಟ್‌ (ಪರಿಗಣಿತ ಅರಣ್ಯ) ವ್ಯಾಪ್ತಿಯಲ್ಲೂ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ನಿಯಮಕ್ಕೆ ತಿದ್ದುಪಡಿ ತರಲು ಪ್ರಯತ್ನ ನಡೆದಿದೆ. ಇನ್ನೂ ಸುಮಾರು ಮೂರು ಲಕ್ಷ ಅರ್ಜಿಗಳು ಬಾಕಿ ಇವೆ. ಜಾಗ ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂಬ ಆಕಾಂಕ್ಷೆ ಪೂರ್ಣವಾಗಿಲ್ಲ. ಹಕ್ಕುಪತ್ರ ವಿತರಣೆ ಪ್ರಕ್ರಿಯೆ ತೃಪ್ತಿ ನೀಡಿಲ್ಲ’ ಎಂದರು.

‘ಹಕ್ಕುಪತ್ರ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಪ್ರತಿವಾರ ಸಭೆ ನಡೆಸಬೇಕು. ಇಬ್ಬರು ಸದಸ್ಯರು ಹಾಜರಿದ್ದರೂ ಸಭೆ ನಡೆಸಬೇಕು. ಸಭೆಯಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಆಸಕ್ತಿ ವಹಿಸದಿರುವುದು, ಅರ್ಜಿ ಇತ್ಯರ್ಥ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.