ಕೊರನಹಳ್ಳಿ (ತರೀಕೆರೆ): ತಾಲ್ಲೂಕಿನ ಗ್ರಾಮೀಣ ಪ್ರದೇಶದ 25ಕ್ಕೂ ಹೆಚ್ಚು ಕಿ.ಮೀ. ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸಲು ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ `ನಮ್ಮಗ್ರಾಮ-ನಮ್ಮಜಿಲ್ಲೆ~ ಕಾರ್ಯಕ್ರಮದಲ್ಲಿ ರೂ. 5 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಶಾಸಕ ಡಿ.ಎಸ್.ಸುರೇಶ್ ತಿಳಿಸಿದರು.
ಇಲ್ಲಿಗೆ ಸಮೀಪದ ಕೋರನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಹುಣಸಘಟ್ಟ -ಕೋರನಹಳ್ಳಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನ ಗ್ರಾಮಗಳಾದ ವೀರಾಪುರ, ಮಲ್ಲೇನಹಳ್ಳಿ, ಗೇರಮರಡಿ, ಲಕ್ಷ್ಮಿಸಾಗರ, ಸುಣ್ಣದಹಳ್ಳಿ, ಸಿದ್ದಾಪುರ, ಜಲ್ದಿಹಳ್ಳಿ, ಎರೆಹಳ್ಳಿ ಮತ್ತು ಇಟ್ಟಿಗೆ ಗ್ರಾಮ ಸಂಪರ್ಕಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಆರ್.ರವಿ ಮಾತನಾಡಿ, ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ತಾಲ್ಲೂಕು ಆಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ ಎಂದರು.
ಪಿಎಂಜಿಎಸ್ವೈ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿರೂಪಾಕ್ಷಪ್ಪ ಮಾಹಿತಿ ನೀಡಿ, ಗ್ರಾಮೀಣ ಪ್ರದೇಶವನ್ನು ಸಂಪರ್ಕಿಸುವ ರಸ್ತೆಗಳು ಗುಣಮಟ್ಟದಿಂದ ಕೂಡಿರುವಂತೆ ನಿರ್ಮಿಸಲು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ವಿಶಾಲ ತಿಪ್ಪೇಶಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಆರ್.ರವಿ, ಹುಣಸಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪೇಶಪ್ಪ, ಸದಸ್ಯೆ ಬಿ.ಸುಜಾತ, ಗ್ರಾಮಸ್ಥರಾದ ಭದ್ರೆಶಣ್ಣ, ಕೋರನಹಳ್ಳಿ ರಾಜಣ್ಣ, ಓಂಕಾರಮೂರ್ತಿ, ಬೆಟ್ಟದಹಳ್ಳಿ ಮೋಹನ್, ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಎಇಇ ಗಣೇಶ್ ಮತ್ತು ಗ್ರಾಮಸ್ಥರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.