ADVERTISEMENT

ಹೆಚ್ಚುವರಿ ಬಸ್‌ಗೆ ಒತ್ತಾಯ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2012, 8:10 IST
Last Updated 2 ಆಗಸ್ಟ್ 2012, 8:10 IST

ಶೃಂಗೇರಿ: ಬಾಳೆಹೊನ್ನೂರಿನಿಂದ ಶೃಂಗೇರಿಗೆ ಶಾಲಾ ಕಾಲೇಜಿನ ಸಮಯದಲ್ಲಿ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ಬೆಳಗ್ಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಎದುರು ಸುಮಾರು ಒಂದು ಗಂಟೆ ಕಾಲ ಸರ್ಕಾರಿ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಸಂಚಾಲಕ ರಂಜಿತ್ ಕಲ್ಕಟ್ಟೆ, ಬಾಳೆಹೊನ್ನೂರಿನಿಂದ ಶೃಂಗೇರಿಗೆ ಬೆಳಗಿನ ವೇಳೆ ಎರಡು ಸರ್ಕಾರಿ ಬಸ್‌ಗಳ ಸೌಲಭ್ಯ ಇದ್ದು ಸುಮಾರು 500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಪಾಸ್‌ಗಳನ್ನು ವಿತರಿಸಲಾಗಿದೆ. ಈ ಬಸ್ ಗಳಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ 200ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಧಿಕ ಹಣ ಪಾವತಿಸಿ ಖಾಸಗಿ ಬಸ್‌ಗಳಿಗೆ ಬರುವಂತಾಗಿದೆ.
 
ನೂತನ ಬಸ್ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರೂ ಸಹ ಸಾರಿಗೆ ಸಂಸ್ಥೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ದಿನ ನಾವು ಸಾಂಕೇತಿಕವಾಗಿ ಬಸ್ ತಡೆ ಮಾಡಿದ್ದು, ಇದೇ 11ರ ಒಳಗಾಗಿ ನೂತನ ಬಸ್ ವ್ಯವಸ್ಥೆ ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾರಿಗೆ ಸಚಿವರ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಸಂಸ್ಥೆಯ ಸ್ಥಳೀಯ ನಿಯಂತ್ರಣಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಚರ್ಚಿಸಿ ಇದೇ  8ರ ಒಳಗಾಗಿ ನೂತನ ಬಸ್ ಸೌಕರ್ಯ ಕಲ್ಪಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.