ADVERTISEMENT

‘ಅಂಗವಿಕಲರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಿ’

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2013, 5:42 IST
Last Updated 4 ಡಿಸೆಂಬರ್ 2013, 5:42 IST

ನರಸಿಂಹರಾಜಪುರ: ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸ ಬೇಕೆಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ತಿಳಿಸಿದರು.

ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಂಗಳವಾರ ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಗವಿಕಲತೆ ಶಾಪವಲ್ಲ. ಅವರನ್ನು ದೂರವಿಡಬಾರದು ಬದಲಿಗೆ ಸಾಮಾನ್ಯ ಜನರಂತೆ ಅವರಿಗೂ ಅವಕಾಶ ನೀಡ ಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರಶಿಕ್ಷಣಾಧಿಕಾರಿ ಸಿ.ಎನ್.ರಮೇಶ್ ಅಂಗವಿಕಲ ಮಕ್ಕಳು ಸಾಮಾನ್ಯ ಮಕ್ಕಳಂತೆ ಪ್ರತಿಭಾ ಕಾರಂಜಿಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅಂಗವಿಕಲ ದಿನಾಚರಣೆಯ ದಿನ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ 8ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ತಾಲ್ಲೂಕಿನಲ್ಲಿ 268 ಅಂಗವಿಕಲ ಮಕ್ಕಳನ್ನು ಗುರುತಿಸಲಾಗಿದೆ. ಹೆಚ್ಚಿನ ಅಂಗವಿಕಲತೆ ಹೊಂದಿರುವ 14 ಮಕ್ಕಳಿಗೆ ಗೃಹಾಧಾರಿತ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.

ಸಿಡಿಪಿಒ ಜ್ಯೋತಿ ಲಕ್ಷ್ಮಿ ಮಾತನಾಡಿ  ಗ್ರಾಮ ­ಪಂಚಾಯಿತಿ ಯವರು  ­ಅಂಗ­­­ವಿಕಲ­­ರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡುವ ಕಾರ್ಯ­ಮಾಡಬೇಕು. ನಂತರ ಕಂದಾಯ ಇಲಾಖೆಯವರು  ಶೇ70 ರಷ್ಟು ಅಂಗವಿಕಲತೆ ಹೊಂದಿದ್ದರೆ ರೂ.400 ಮಾಸಿಕ ಭತ್ಯೆ ಹಾಗೂ ಶೇ 75ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿದ್ದರೆ ರೂ.1000 ಮಾಸಿಕ ಭತ್ಯೆ ನೀಡಲು ಅವಕಾಶವಿದೆ. ಜಿಲ್ಲಾ ಮಟ್ಟದಲ್ಲಿ ಅಂಗವಿಕಲ ಮಕ್ಕಳ ಶಾಲೆಯಿದ್ದು ಅವರಿಗೆ ಶಿಕ್ಷಣ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಪಂಚಾ­ಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ  ಮಹೇಶ್ ಮಾತನಾಡಿ ಅಂಗವಿಕಲ ಮಕ್ಕಳನ್ನು ಸಮಾಜ ನಿರ್ಲಕ್ಷಿಸ­ಬಾರದು. ತಾಲ್ಲೂಕು ಪಂಚಾಯಿತಿ ವತಿಯಿಂದ ಸೌಲಭ್ಯ ಒದಗಿಸಲು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ತಹಶೀಲ್ದಾರ್ ಜೆ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯ­ನಿರ್ವಾಹಕ ಅಧಿಕಾರಿ ಜಗದೀಶ್, ಸಹಾಯಕ ತೋಟಗಾರಿಕಾ ನಿರ್ದೇಶಕಿ ಸೀಮಾ, ಪಟ್ಟಣ ಪಂಚಾಯಿತಿ ಸದಸ್ಯೆ ಸಮೀರಾ ನಹೀಂ, ರೋಟರಿ ಅಧ್ಯಕ್ಷ ಸುಂದರೇಶ್,ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಪಿ.ಸನ್ನಿ, ಇನ್ನರ್ ವ್ಹೀಲ್ ಅಧ್ಯಕ್ಷೆ ಶೀಲಾ ಸುಂದರೇಶ್, ರಂಜಿತಾ, ಕೃಷ್ಣನಾಯಕ್, ಲವಕುಮಾರ್ ಇದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 5ಜನ ಅಂಗವಿಕಲ ಮಕ್ಕಳನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.