ಚಿಕ್ಕಮಗಳೂರು: ಹಿಂದುಳಿದ ಜಾತಿಗಳು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ರೂಪಿಸಬೇಕಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಉಪಾಧ್ಯಕ್ಷ ಕೆ.ಎಂ.ರಾಮಚಂದ್ರ ತಿಳಿಸಿದರು. ನಗರದ ಸ್ಕೌಟ್ಸ್ ಭವನದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ದಶಮಾನೋತ್ಸವ ಮತ್ತು ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಹಿಂದುಳಿದ ಜಾತಿಗಳಿಗೆ ಆಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಅನ್ಯಾಯ ಮನವರಿಕೆ ಮಾಡಿಕೊಡಬೇಕು. ಜನಗಣತಿಯಲ್ಲಿ ಹಿಂದುಳಿದ ಜಾತಿಗಳನ್ನು ಗುರುತಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಹಿಂದುಳಿದ ವರ್ಗಗಳಿಗೆ ಸರ್ಕಾರಿ ನೌಕರಿಯಲ್ಲಿ ಬಡ್ತಿ ನೀಡಬೇಕು. ಹಿಂದುಳಿದ ಜಾತಿಗಳು ನಡೆಸುತ್ತಿರುವ ಅನುದಾನರಹಿತ ವಿದ್ಯಾರ್ಥಿ ನಿಲಯಗಳ ನಿರ್ವಹಣಾ ವೆಚ್ಚಕ್ಕಾಗಿ ₨ 5 ಲಕ್ಷ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 12ರಂದು ನಡೆಯುವ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ದಶಮಾನೋತ್ಸವ ಮತ್ತು ಜಾಗೃತಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು ಎಂದು ತಿಳಿಸಿದರು. ಉಪಾಧ್ಯಕ್ಷ ಸುರೇಶ್ ಎಂ.ಲಾಥೋರ್, ಪ್ರಧಾನಕಾರ್ಯದರ್ಶಿ ಎಸ್.ಜೆ.ಕಾಳೇಗೌಡ, ಆಂತರಿಕ ಲೆಕ್ಕ ಪರಿಶೋಧಕ ಎಣ್ಣೆಗೆರೆ ಆರ್. ವೆಂಕಟರಾಮಯ್ಯ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.