ತರೀಕೆರೆ: ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳಿಂದ ₹108 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.
ಪಟ್ಟಣದ ಗಾಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ₹ 2.30 ಕೋಟಿ ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
‘ದರ್ಗಾ, ಮಸೀದಿ, ಶಾದಿ ಮಹಲ್ಗಳ ಅಭಿವೃದ್ಧಿಗೆ ಜಿಲ್ಲೆಯಲ್ಲೇ ಅತಿ ಹೆಚ್ಚು ಅನುದಾನವನ್ನು ತರೀಕೆರೆ ಕ್ಷೇತ್ರಕ್ಕೆ ತರಲಾಗಿದ್ದು, ಮುಂದಿನ 15 ದಿನಗಳಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ₹5 ಕೋಟಿ ಮೊತ್ತದ ಕಾಮಗಾರಿಯಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುವುದು ಎಂದರು.
ನಂದಿ ಹೊಸಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಇದರ ಉದ್ಘಾಟನೆ ಹಾಗೂ ಯರೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ವಿತರಣಾ ಕೇಂದ್ರ ಮಂಜೂರಾಗಿದ್ದು ಇದರ ಶಂಕುಸ್ಥಾಪನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರನ್ನು ಆಮಂತ್ರಿಸುವ ಚಿಂತನೆ ನಡೆದಿದೆ ಎಂದರು.
ಪುರಸಭಾಧ್ಯಕ್ಷ ವಸಂತಕುಮಾರ್ ಮಾತನಾಡಿ ‘ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ತಂದಿದ್ದಾರೆ. ಯುಜಿಡಿ, ದಿನದ 24 ಗಂಟೆ ಕುಡಿಯುವ ನೀರಿನ ಯೋಜನೆ ಜಾರಿಯಾಗುವುದರ ಮೂಲಕ ತರೀಕೆರೆ ಸ್ಮಾರ್ಟ್ ಸಿಟಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.
ತರೀಕೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಚ್.ಯು. ಫಾರೂಕ್ ಮಾತನಾಡಿ, ‘ಕೋಡಿಕ್ಯಾಂಪ್ನಲ್ಲಿ ಆರು ವಾರ್ಡ್ಗಳನ್ನು ಕಡೆಗಣಿಸಲಾಗಿತ್ತು. ಶಾಸಕ ಜಿ.ಎಚ್. ಶ್ರೀನಿವಾಸ್ ಈ ವಾರ್ಡ್ ಅಭಿವೃದ್ಧಿಗೆ ಅನುದಾನ ಒದಗಿಸಿದ್ದಾರೆ’ ಎಂದರು.
ಪುರಸಭಾ ಉಪಾಧ್ಯಕ್ಷೆ ಪಾರ್ವತಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಅನೀಲ್ ಕುಮಾರ್, ಸದಸ್ಯರಾದ ಟಿ. ದಾದಾಪೀರ್, ಲೋಕೇಶ್, ಕಮಲಾ ರಾಜೇಂದ್ರ, ಶಬೀನಾ ಭಾನು, ಗಿರಿಜಾ ಪ್ರಕಾಶ್ ವರ್ಮಾ, ರಿಹಾನ ಪರ್ವೀನ್, ಪರಮೇಶ್, ಬ್ಲಾಕ್ ಕಾಂಗ್ರೇಸ್ ನಗರ ಘಟಕದ ಅಧ್ಯಕ್ಷ ಪ್ರಕಾಶ್ ವರ್ಮಾ, ಅಮ್ಜದ್ ಮಾತನಾಡಿದರು.
ಪುರಸಭಾ ಸದಸ್ಯರು ಮತ್ತು ಪಕ್ಷದ ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.