ADVERTISEMENT

15ರಂದು ತರೀಕೆರೆಗೆ ಮುಖ್ಯಮಂತ್ರಿ: ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2014, 6:07 IST
Last Updated 11 ಜನವರಿ 2014, 6:07 IST

ತರೀಕೆರೆ : ಇದೇ 15 ರಂದು ಪಟ್ಟಣಕ್ಕೆ ಬರಲಿದ್ದು, ಸಕಲ ಸಿದ್ಧತೆಗಳನ್ನು ಚುರುಕುಗೊಳಿಸುವಂತೆ ಶಾಸಕ ಜಿ.ಎಚ್. ಶ್ರೀನಿವಾಸ್ ಅಧಿಕಾರಿಗಳಿಗೆ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಬೆಳಿಗ್ಗೆ  ಪಟ್ಟಣಕ್ಕೆ 11ಕ್ಕೆ ಬಂದು ಪಟ್ಟಣದ ಬಯಲು ರಂಗ ಮಂದಿರದಲ್ಲಿ ಸಾರ್ವಜನಿಕ ಭಾಷಣ ಮಾಡುವರು. ತಾಲ್ಲೂಕಿ ನಲ್ಲಿ ಈಗಾಗಲೇ ಮುಕ್ತಾಯ ಕಂಡಿರುವ ಅಮೃತಾಪುರ ಪ್ರವಾಸಿ ತಾಣದ ಯಾತ್ರಿ ನಿವಾಸ, ಆಯುಷ್ ಆಸ್ಪತ್ರೆ  ಹಾಗೂ ಇನ್ನಿತರ  ಮುಕ್ತಾಯ ಕಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯೊಂದಿಗೆ, ತಾಲ್ಲೂಕಿನ  ವಿವಿಧ ಇಲಾಖೆಗೆ ಸಂಬಂಧಪಟ್ಟಂತೆ ಹಲವು ಅಭಿವೃದ್ಧಿ ಕಾಮಗಾರಿಗಳಾದ ಪ್ರಮುಖವಾಗಿ ಕುಡಿಯುವ ನೀರಿನ ಯೋಜನೆ , ಓವರ್ ಹೆಡ್ ಟ್ಯಾಂಕ್, ಪಶು ಆಸ್ಪತ್ರೆ, ನಂದಿ ಗ್ರಾಮದ ಆಯುರ್ವೇದ ಚಿಕಿತ್ಸಾಲಯ ಇನ್ನೂ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದು ತಿಳಿಸಿದರು. 

ಮುಖ್ಯಮಂತ್ರಿಗಳ ಜೊತೆ ಸಚಿವರಾದ ರೋಷನ್ ಬೇಗ್, ಉಮಾಶ್ರೀ, ಜಿಲ್ಲಾ ಉಸ್ತುವಾರಿ ಸಚಿವ ಅಭಯ್ಚಂದ್ರ ಜೈನ್ ಹಾಗೂ ಇನ್ನಿತರರು ಪಾಲ್ಗೊಳ್ಳುವರು.

ತಾಲ್ಲೂಕಿನಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಮಂಜೂರಾತಿಗೆ  ಇಲಾಖಾವಾರು ಆಧಾರದಲ್ಲಿ  ತಯಾರಿಸಿ ಒಂದೇ ಮನವಿಯಲ್ಲಿ ಎಲ್ಲಾ ಕಾರ್ಯಗಳ ಬೇಡಿಕೆ ಒಳ ಗೊಂಡ ಮನವಿ ಪತ್ರ ನೀಡಲು ಉದ್ದೇಶಿಸಲಾಗಿದೆ. ಪ್ರತಿಯೊಂದು ಇಲಾಖೆಯವರು ತಮ್ಮ ಅಗತ್ಯ ಇರುವ ಕಾಮಗಾರಿಗಳ ಪಟ್ಟಿಯನ್ನು ತಹಶೀಲ್ದಾರ್ ಅವರಿಗೆ ನೀಡುವಂತೆ ಸೂಚಿಸಿದರು.

ಮುಖ್ಯಮಂತ್ರಿಗಳ ಕಾರ್ಯಕ್ರಮ ಇರುವ ಕಾರಣ ರಜೆ ಹೆಸರಿನಲ್ಲಿ ತಪ್ಪಿಸಿಕೊಳ್ಳುವ ಕಾರ್ಯಕ್ಕೆ ಅಧಿಕಾರಿ ಗಳು ಕೈ ಹಾಕಿದಲ್ಲಿ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಯ ಮುಖ್ಯಸ್ಥರು ತಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಮುಂದಾಗುವಂತೆ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಜಿ.ಅನುರಾಧಾ, ತಹಶೀಲ್ದಾರ್ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ದೇವರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ.ಕುಮಾರ್,ವಿವಿಧ ಇಲಾಖೆಯ ಮುಖ್ಯಸ್ಥರು,  ಗ್ರಾಮ ಪಂಚಾಯಿತಿ ,ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಪಕ್ಷದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.