ADVERTISEMENT

‘ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಬೇಕು’

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 9:33 IST
Last Updated 2 ಫೆಬ್ರುವರಿ 2018, 9:33 IST

ಮೂಡಿಗೆರೆ: ವಿದ್ಯಾರ್ಥಿನಿಲಯಗಳಲ್ಲಿ ನಿಲಯ ಪಾಲಕರು ಹಾಗೂ ಅಡುಗೆ ಸಿಬ್ಬಂದಿ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ. ರತನ್‌ ಅಭಿಪ್ರಾಯಪಟ್ಟರು.

ಪಟ್ಟಣದ ತತ್ಕೊಳ ರಸ್ತೆಯ ಅಂಬೇಡ್ಕರ್ ಭವನದಲ್ಲಿ ಗುರುವಾರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ನಿಲಯ ಪಾಲಕರು ಹಾಗೂ ಅಡುಗೆ ಸಿಬ್ಬಂದಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾ ಗಾರವನ್ನು ಉದ್ಘಾಟಿಸಿ ಅವರು ಮಾತ ನಾಡಿದರು.

ದೇಶದ ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಜನರ ತೆರಿಗೆ ಹಣವನ್ನು ಮಕ್ಕಳ ಕಲ್ಯಾಣಕ್ಕೆ ಬಳಸುತ್ತಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ಪ್ರತಿ ಮಗುವಿಗೂ ಎಲ್ಲಾ ಸವಲತ್ತುಗಳನ್ನು ಒದಗಿಸಿ, ಸರ್ಕಾರದ ಉದ್ದೇಶವನ್ನು ಈಡೇರಿಸಬೇಕು ಎಂದು ಹೇಳಿದರು.

ADVERTISEMENT

ಸುಮಾರು 60ಕ್ಕೂ ಅಧಿಕ ಬಾರಿ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿದ್ದು, ತಾಲ್ಲೂಕಿನಲ್ಲಿ ಮುಗ್ರಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಸಂಸೆಯ ಆಶ್ರಮ ಶಾಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿನಿಲಯಗಳು ಒಂದಲ್ಲಾ ಒಂದು ಸಮಸ್ಯೆಯಲ್ಲಿವೆ. ವಿದ್ಯಾರ್ಥಿನಿಲಯದ ಕೆಲಸವು ಪುಣ್ಯದ ಕೆಲಸ. ಮಕ್ಕಳನ್ನು ಉತ್ತಮವಾಗಿ ಕಂಡರೆ ಅದಕ್ಕಿಂತ ಮುಗಿಲಾದ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬೆಳವಾಡಿ ಮಾತನಾಡಿ, ವಿದ್ಯಾರ್ಥಿನಿಲಯದಲ್ಲಿರುವ ಮಗುವನ್ನು ಸಿಬ್ಬಂದಿ ತಮ್ಮ ಮಕ್ಕಳಿಗೆ ನೀಡುವಂತಹ ಪೋಷಣೆಯನ್ನು ಒದಗಿಸಬೇಕು. ಮಕ್ಕಳಿಗೆ ಶಿಕ್ಷಣವನ್ನು, ಸರ್ಕಾರದ ಸವಲತ್ತುಗಳನ್ನು ಒದಗಿಸುವುದರ ಜತೆಗೆ, ಸಂಸ್ಕಾರವನ್ನು ಒದಗಿಸಲು ಮುಂದಾಗಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶ್ಯಾಮಣ್ಣ ಬಣಕಲ್‌ ಮಾತನಾಡಿ, ಮಕ್ಕಳು ಆರೋಗ್ಯವಾಗಿ ಬೆಳೆಯಬೇಕಾದ ಅವಧಿಯಲ್ಲಿ ವಿದ್ಯಾರ್ಥಿನಿಲಯಕ್ಕೆ ಬರುವುದರಿಂದ, ಈ ವೇಳೆ ಅವರಿಗೆ ಪೋಷಕಾಂಶಯುಕ್ತ ಆಹಾರದ ಅವಶ್ಯಕತೆಯಿರುತ್ತದೆ. ವಿದ್ಯಾರ್ಥಿನಿಲಯಗಳಲ್ಲಿ ಪೌಷ್ಟಿಕ ಆಹಾರ ನೀಡದಿದ್ದರೆ, ಮಕ್ಕಳ ಬೆಳವಣಿಗೆ ಹಾಗೂ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಮಿತಮುತ್ತಪ್ಪ, ಶೃಂಗೇರಿ ಶಿವಣ್ಣ, ಕೆ.ಪ್ರಭಾಕರ್‌, ರವೀಂದ್ರ ಬೆಳವಾಡಿ ವಿದ್ಯಾರ್ಥಿನಿಲಯಗಳ ಸಿಬ್ಬಂದಿಗಳಿಗೆ ವಿವಿಧ ವಿಚಾರಗಳ ಕುರಿತು ಕಾರ್ಯಗಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.