ಶೃಂಗೇರಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರ ಧೋರಣೆಯಿಂದ ದೇಶ ಅಧೋಗತಿಯತ್ತ ಸಾಗುತ್ತಿದೆ.ತೈಲ ಬೆಲೆ ಏರಿಸಿ ಬಡವರನ್ನು ಸಂಕಷ್ಟಕ್ಕೆ ದೂಡಿದ್ದ ಕೇಂದ್ರ ಸರ್ಕಾರವು ರೈತರ ಪರವಾಗಿ ನಿಂತಿಲ್ಲ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರನಕೊಡಿಗೆ ನಟರಾಜ್ ದೂರಿದರು.
ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದ ಭಾರತಿ ಬೀದಿಯ ಪೆಟ್ರೋಲ್ ಬಂಕ್ನಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಮಂಗಳವಾರ ಹಮ್ಮಿಕೊಂಡ ಪ್ರತಿಭಟನೆ ಯಲ್ಲಿ ಅವರು ಮಾತನಾಡಿದರು.
‘ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿದ್ದರೂ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿಲ್ಲ. ಕೇಂದ್ರ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರ ಧನ ತರಲು ಸಂಸದರಿಗೆ ಆಸಕ್ತಿಯಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಅವರು ಕ್ಷೇತ್ರಕ್ಕೆ ಬರುತ್ತಾರೆ’ ಎಂದರು.
ಕಾಂಗ್ರೆಸ್ ವಕ್ತಾರ ಉಮೇಶ್ ಪುದುವಾಳ್ ಮಾತನಾಡಿ, ‘ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ. ಆಡಳಿತವನ್ನು ದುರುಪಯೋಗ ಪಡಿಸಿಕೊಂಡಿದೆ’ ಎಂದು ಆರೋಪಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಕುರದಾಮನೆ ವೆಂಕಟೇಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ಲತಾ ಗುರುದತ್ತ ಕಾಂಗ್ರೆಸ್ ಮುಖಂಡರಾದ ಕೆ.ಟಿ.ಮಂಜುನಾಥ್, ತ್ರಿಮೂರ್ತಿ, ನೂತನ್ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.