ಚಿಕ್ಕಮಗಳೂರು: ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ರಾಜ್ಯ ಸರ್ಕಾರ ನೆರೆ ಪರಿಹಾರ ಮತ್ತು ಅನ್ಯ ಉದ್ದೇಶಕ್ಕೆ ಬಳಸಬಾರದು, ಐಪಿಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ರದ್ದುಗೊಳಿಸಬೇಕು ಎಂದು ಜಿಲ್ಲಾಕಟ್ಟಡ ಕಾರ್ಮಿಕರ ಸಂಘ(ಎಐಟಿಯುಸಿ)ದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು.
ಕಟ್ಟಡ ಕಾರ್ಮಿಕರು ಅಸಂಘಟಿತರಾಗಿದ್ದಾರೆ. ಅವರಿಗೆ ಸೌಲಭ್ಯ, ಪರಿಹಾರ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಹಲವಾರು ವರ್ಷಗಳ ಹಿಂದೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಿತು. ಈ ಮಂಡಳಿ ಕಟ್ಟಡ ಮಾಲೀಕರಿಂದ ಸೆಸ್ ಸಂಗ್ರಹಿಸುತ್ತಿತ್ತು. ಅದರಲ್ಲಿ ಕಾರ್ಮಿಕರಿಗೆ ಪಿಂಚಣಿ, ಅಪಘಾತ ಪರಿಹಾರ, ಅಂತ್ಯಕ್ರಿಯೆ ವೆಚ್ಚ, ಮಧುವೆ, ಹೆರಿಗೆ, ಶೈಕ್ಷಣಿಕ ಸಹಾಯಧನ ಸಹಿತ ವಿವಿಧ ಸೌಲಭ್ಯ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಕಟ್ಟಡ ಕಾರ್ಮಿಕರ ಕಲ್ಯಾಣನಿಧಿಯನ್ನು ರಾಜ್ಯ ಸರ್ಕಾರ ಬೇರೆ ಉದ್ದೇಶಕ್ಕೆ ಬಳಕೆ ಮಾಡುವುದನ್ನು ವಿರೋಧಿಸಿದ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆಗೊಳಿಸಿರುವುದು ಸರಿಯಲ್ಲ ಎಂದರು.
ಕಟ್ಟಡ ಕಾರ್ಮಿಕರ ಕಲ್ಯಾಣನಿಧಿಯನ್ನು ಅನ್ಯಕಾರ್ಯಗಳಿಗೆ ಬಳಸಿದರೆ, ಲಕ್ಷಾಂತರ ಕಟ್ಟಡ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗುವರು. ಸರ್ಕಾರ ಅದನ್ನು ಅರ್ಥ ಮಾಡಿಕೊಳ್ಳಬೇಕು. ಕಟ್ಟಡ ಕಾರ್ಮಿಕರ ಹಿತಕಾಯಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಜಿ.ರಘು, ತಾಲ್ಲೂಕು ಅಧ್ಯಕ್ಷ ವಸಂತ್ಕುಮಾರ್, ಪ್ರಧಾನಕಾರ್ಯದರ್ಶಿ ಎ.ಜಯಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.