ನರಸಿಂಹರಾಜಪುರ: ಪಟ್ಟಣದ ನೀರಿನ ಟ್ಯಾಂಕ್ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಬೇಕೆಂಬ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳು ಹಾಗೂ ದಲಿತ ಸಂಘಟನೆಗಳ ಕನಸು ನನಸಾಗಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ತಿಳಿಸಿದರು.
ಇಲ್ಲಿನ ನೀರಿನ ಟ್ಯಾಂಕ್ ವೃತ್ತಕ್ಕೆ ಭಾನುವಾರ ಸಂಜೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಿರುವ ನಾಮ ಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಟ್ಟಣದ ಪ್ರಮುಖ ಬಸ್ ನಿಲ್ದಾಣ, ಬಸ್ ತಂಗುದಾಣ, ಸಂತೆಮಾರುಕಟ್ಟೆ ಹಾಗೂ ಪ್ರಮುಖ ವೃತ್ತಕ್ಕೆ ಮಹನೀಯ ಹೆಸರು ಇಡುವ ಬಗ್ಗೆ ಸ್ಥಾಯಿ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಇದಕ್ಕೆ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಯವರು ಬೆಂಬಲ ನೀಡಿದ್ದರು. ಅದರಂತೆ ಭೀಮಕೊರೆಂಗಾವ್ ವಿಜಯದ 105ನೇ ವಿಜಯೋತ್ಸವದ ದಿನವಾದ ಜನವರಿ 1ರಂದು ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಲಾಗಿದೆ. ಅಂಬೇಡ್ಕರ್ ಅವರು ಶೋಷಿತ ಸಮುದಾಯದಕ್ಕೆ ನ್ಯಾಯ ದೊರಕಿಸಿಕೊಡಲು ಶ್ರಮಿಸಿದವರು. ಅವರು ದೇಶದ ಆಸ್ತಿಯಾಗಿದ್ದಾರೆ. ಡಾ.ಅಂಬೇಡ್ಕರ್ ಅವರ ಪುತ್ಥಳಿ ಅಳವಡಿಸುವ ಬಗ್ಗೆಯೂ ಬಜೆಟ್ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜನಪ್ರತಿನಿಧಿಗಳು,ದಲಿತ ಸಂಘಟನೆಗಳ ಮುಖಂಡರನ್ನು ಸೇರಿಸಿ ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ, ಸದಸ್ಯರಾದ ರೇಖಾ, ಮುಕುಂದ, ಮುನಾವರ್ ಪಾಷ, ದಲಿತ ಸಂಘರ್ಷ ಸಮಿತಿಯ ಎಚ್.ಎಂ.ಶಿವಣ್ಣ, ಡಿ.ರಾಮು, ಮಾತನಾಡಿದರು. ಪಟ್ಟಣ ಪಂಚಾಯಿತಿ ಸದಸ್ಯರಾದ ಶೋಜಾ, ರೀನಾ ಮೋಹನ್, ದಲಿತ ಮುಖಂಡರಾದ ಮೃತ್ಯುಂಜಯ, ಫಿಕಪ್ ಚಂದ್ರು, ಹನುಮಂತ, ಶಾಮ್, ರವಿ, ಮೋಹನ್, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ.ಉಪೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.