
ತರೀಕೆರೆ: ಗ್ರಾಮೀಣ ಪ್ರದೇಶದಲ್ಲಿ ಜಾತಿ ವ್ಯವಸ್ಥೆ ಇನ್ನೂ ಜೀವಂತವಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಪುರಸಭೆಯ ಆಶ್ರಯದಲ್ಲಿ ಪಟ್ಟಣದ ಶ್ರೀಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜಕ್ಕೆ ಅಂಟಿಕೊಂಡಿದ್ದ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದ ಕನಕರು, ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನ್ನೇನು ಬಲ್ಲೀರಾ ಎಂದು ತಿಳಿಸಿದ್ದರೂ ಸಹ ಜಾತಿ ವ್ಯವಸ್ಥೆ ಇನ್ನೂ ನಿರ್ಮೂಲನೆಯಾಗಿಲ್ಲ. ದೇವರು ಸರ್ವಾಂತರ್ಯಾಮಿ ಎಂದು ತೋರಿಸಿಕೊಟ್ಟವರು ಕನಕರು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಎನ್.ವಿ. ನಟೇಶ್, ಕನಕದಾಸರು ಸಮಾಜಕ್ಕೆ ನೀಡಿದ ಸಂದೇಶ, ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಪುರಸಭಾಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷೆ ಗೀತ ಗಿರಿರಾಜ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಆರ್. ಅನಂತಪ್ಪ ಮಾತನಾಡಿದರು.
ಕುರುಬ ಸಮಾದ ಅಧ್ಯಕ್ಷ ಟಿ.ಎಸ್. ರಮೇಶ್, ತಹಶೀಲ್ದಾರ್ ವಿಶ್ವಜೀತ್ ಮೆಹತಾ, ತರೀಕೆರೆ ತಾಲ್ಲೂಕು ಪಂಚಾಯಿತಿ ಇಒ ದೇವೇಂದ್ರಪ್ಪ, ಪುರಸಭಾ ಮಾಜಿ ಅಧ್ಯಕ್ಷ ಪ್ರಕಾಶ್ ವರ್ಮಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.