
ಮೂಡಿಗೆರೆ: ತಾಲ್ಲೂಕಿನ ಬಾಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿಲ್ಲದೇ ಶಾಲೆಯನ್ನು ಮುಚ್ಚುವ ಸ್ಥಿತಿಗೆ ತಲುಪಿದೆ ಎಂದು ಆರೋಪಿಸಿ ಸೋಮವಾರ ಪೋಷಕರು, ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು.
‘ಸುತ್ತಮುತ್ತಲ ಪ್ರದೇಶಗಳ ಮಕ್ಕಳಿಗೆ ಬಾಳೂರು ಸರ್ಕಾರಿ ಶಾಲೆಯೇ ಶಿಕ್ಷಣಕ್ಕೆ ಆಶ್ರಯವಾಗಿದ್ದು, ಮೂರು ವರ್ಷಗಳ ಹಿಂದೆ ಶಾಲೆಯಲ್ಲಿ 80ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು. ಆದರೆ ಮೂರು ವರ್ಷಗಳಿಂದ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸದೇ ಶಾಲೆಯನ್ನು ನಿರ್ಲಕ್ಷಿಸಲಾಗಿದ್ದು, ಇದೀಗ 20 ಮಕ್ಕಳು ಮಾತ್ರ ಶಾಲೆಯಲ್ಲಿದ್ದಾರೆ. ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಹಾಗೂ ಶಾಸಕರಿಗೆ ಮನವಿ ಮಾಡಿದ್ದೇವು. ಆದರೆ ಇದುವರೆಗೂ ಶಾಲೆಗೆ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸಿಲ್ಲ. ಕಾಯಂ ಶಿಕ್ಷಕರಿಲ್ಲದೇ ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಯಾಗುತ್ತಿದ್ದು, ಪೋಷಕರು ಮಕ್ಕಳನ್ನು ಬೇರೆಡೆಗೆ ಸೇರಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸಿ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮನೋಜ್, ಸದಸ್ಯ ಮಂಜುನಾಥ್, ಗ್ರಾಮದ ಮುಖಂಡರಾದ ರಘುಪತಿ, ಆದರ್ಶ್, ಸತೀಶ್, ನಟೇಶ್, ಗೀತಾ, ಸುಮಾವತಿ, ವಿಜೇತ್ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.