ADVERTISEMENT

ಮೂಲ ಸೌಕರ್ಯ ವಿಳಂಬ: ಬಿಜೆಪಿ ಪ್ರತಿಭಟನೆ

ಗ್ರಾಮ ಪಂಚಾಯಿತಿ ಕಚೇರಿಗಳ ಎದುರು ಬಿಜೆಪಿ ಆಕ್ರೋಶ‘: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾವಚಿತ್ರ ದಹನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 6:30 IST
Last Updated 9 ಜುಲೈ 2025, 6:30 IST
ಸಖರಾಯಪಟ್ಟಣದ ಗ್ರಾಮ ಪಂಚಾಯಿತಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು
ಸಖರಾಯಪಟ್ಟಣದ ಗ್ರಾಮ ಪಂಚಾಯಿತಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು   

ಚಿಕ್ಕಮಗಳೂರು: ಗ್ರಾಮೀಣ ನಿವಾಸಿಗಳ ವಸತಿ, ನಿವೇಶನ ಸೇರಿ ಮೂಲ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸಖರಾಯಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಿಂದ ಪಂಚಾಯಿತಿ ಕಚೇರಿ ತನಕ ಜಾಥಾ ನಡೆಸಿದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರ ಸುಟ್ಟು  ಆಕ್ರೋಶ ಹೊರಹಾಕಿದರು.

ಬಳಿಕ ಮಾತನಾಡಿದ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನಂದೀಶ್ ಮದಕರಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ವಿತರಣೆಯಲ್ಲಿ ವಿಳಂಬವಾಗುತ್ತಿದೆ. ವಸತಿ, ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸುತ್ತಿಲ್ಲ. 94–ಸಿ ಅಡಿಯಲ್ಲಿ ಅರ್ಜಿ ಹಾಕಿರುವ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುತ್ತಿಲ್ಲ’ ಎಂದು ಆರೋಪಿಸಿದರು.

ADVERTISEMENT

ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗಳ ಹಣ ಬಿಡುಗಡೆಯಾಗುತ್ತಿಲ್ಲ. ಕಾರಣವಿಲ್ಲದೇ ಯಾವುದೇ ಯೋಜನೆ  ರದ್ದುಗೊಳಿಸಬಾರದು. ಪಹಣಿ, ಛಾಪಾ ಕಾಗದ, ವಿದ್ಯುತ್ ದರ ಸೇರಿ ಸಾರ್ವಜನಿಕ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಮನೆಗಳಿಗೆ ಅನುದಾನ ಬಿಡುಗಡೆಗೊಳಿಸಬೇಕು. ರೈತರ ಸಾಗುವಳಿ ಜಮೀನಿಗೆ ಒತ್ತುವರಿ ನೆಪದಲ್ಲಿ ನೀಡಿರುವ ನೋಟೀಸ್ ತಕ್ಷಣವೇ ವಾಪಸ್ ಪಡೆಯಬೇಕು. ಖಾತೆಗಳ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಆಗ್ರಹಿಸಿದರು.

ಅಕ್ರಮ-ಸಕ್ರಮ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು. ಇತ್ಯರ್ಥಗೊಂಡ ರೈತರಿಗೆ ಪಹಣಿ ವಿತರಿಸಬೇಕು. 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ದರಿಗೂ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯನ್ನು ರಾಜ್ಯದಲ್ಲಿ ಕಡ್ಡಾಯವಾಗಿ ಜಾರಿಗೊಳಿಸಬೇಕು. ಕೇಂದ್ರದ ಜನಪರ ಯೋಜನೆಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸಬೇಕು ಎಂದು ಹೇಳಿದರು.

ದೀನ ದಲಿತರ ಮಕ್ಕಳಿಗೆ ಕೊಡುವ ವಿದ್ಯಾರ್ಥಿ ವೇತನ ಕಡಿತಗೊಂಡಿದೆ. ವಿದ್ಯುತ್ ಬಿಲ್ ಶೂನ್ಯ ಎಂದು ಹೇಳಿ ಪ್ರತಿ ತಿಂಗಳು ಮನೆಗಳಿಗೆ ಬಿಲ್ ಬರುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಬಡವರ ಜೇಬಿಗೆ ಕತ್ತರಿ ಹಾಕುಲಾಗುತ್ತಿದೆ ಎಂದರು.

ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಆರ್.ಯೋಗೇಂದ್ರ ಮಾತನಾಡಿ, ರೈತರಿಗೆ ಕೇಂದ್ರ ಸರ್ಕಾರ ₹6 ಸಾವಿರ ನೀಡುತ್ತಿದೆ. ಇದರ ಜತೆಗೆ ರಾಜ್ಯ ಸರ್ಕಾರ ₹4 ಸಾವಿರ ಸೇರಿಸಿ ಖಾತೆಗೆ ಜಮೆ ಮಾಡಬೇಕು. ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿರ್ಮಿಸದೆ ಪ್ರತಿದಿನವು ನಿವಾಸಿಗಳಿಗೆ ನೀರಿನ ಸಮಸ್ಯೆಯಾಗುತ್ತಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಜಯಪ್ಪ, ಅರುಣ್‌ ಕಾವಲ್, ಯುವ ಮೋರ್ಚಾ ಗ್ರಾಮಾಂತರ ವಿಭಾಗದ ಕಾರ್ಯದರ್ಶಿ ಪುರುಷೋತ್ತಮ, ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕೊಲ್ಲಾಬೋವಿ, ಗ್ರಾಮಾಂತರ ಅಧ್ಯಕ್ಷ ಪ್ರದೀಪ್‌ ನಾಯ್ಕ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಗೌಡ, ಮುಖಂಡ ಪ್ರವೀಣ್, ರಾಜಣ್ಣ, ಶಿವಮೂರ್ತಿ, ಮಿಥುನ್, ಲೋಕೇಶ್‌ ನಾಯ್ಕ, ದಿಲೀಪ್, ಮಂಜುನಾಥ್, ವಿನೋದ್‌ ನಾಯ್ಕ, ರವಿನಾಯ್ಕ ಭಾಗವಹಿಸಿದ್ದರು.

ಚಿಕ್ಕಮಗಳೂರು ತಾಲ್ಲೂಕಿನ ತೊಗರಿಹಂಕಲ್ ಗ್ರಾಮ ಪಂಚಾಯಿತಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ತೊಂಗರಿಹಂಕಲ್ ಗ್ರಾ.ಪಂ ಎದುರು ಪ್ರತಿಭಟನೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ತೊಗರಿಹಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹೊಸಪೇಟೆಯಲ್ಲಿನ ತೊಗರಿಹಂಕಲ್ ಗ್ರಾಮ ಪಂಚಾಯಿತಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಜನವಿರೋಧಿ ನೀತಿ ಮತ್ತು ಬೆಲೆ ಏರಿಕೆ ಮೂಲಕ ಜನರನ್ನು ಸಂಕಷ್ಟಕ್ಕೆ ದೂಡಿದೆ. ಆಶ್ರಯ ಯೋಜನೆ ಮನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಇ-ಸ್ವತ್ತು ಮತ್ತು 94– ಸಿ ಅರ್ಜಿಗಳನ್ನು ವಿಲೇವಾರಿ ಮಾಡಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಸಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಗ್ರಾಮೀಣ ಬಾಗದಲ್ಲಿ ಇರುವ ಬಡ ಮಧ್ಯಮ ವರ್ಗದವರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಗ್ರಾಮೀಣ ಭಾಗದ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.  ಬಿಜೆಪಿ ಮುಖಂಡರಾದ ಎಚ್.ವಿ.ದೇವರಾಜ್ ಆರ್. ಅಮವಾಸೆ ರಾಜ್ಯ ಎಸ್ಸಿ ಮೋಚಾ ಕಾರ್ಯದರ್ಶಿ ಸೀರಾರಾಮ ಭರಣ್ಯ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಪುನೀತ್ ಮುಖಂಡರಾದ ವೈ.ಜಿ.ಸುರೇಶ್ ಕಂಬಿಹಳ್ಳಿ ರಮೇಶ್ ಪೂಜಾರಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.