ಮೂಡಿಗೆರೆ: ಹಾನಿಗೊಳಗಾದ ರಸ್ತೆ ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡರು ಬುಧವಾರ ಪಟ್ಟಣದ ಲಯನ್ಸ್ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ಕ್ರೋಡೀಕರಿಸುವ ಸಲುವಾಗಿ ಜನರ ಬೊಕ್ಕಸದಿಂದ ಲೂಟಿ ಹೊಡೆಯುತ್ತಿದೆ. ಎರಡು ವರ್ಷಗಳಿಂದ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯವಾಗಿದೆ’ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಘು ಜನ್ನಾಪುರ ಮಾತನಾಡಿ, ರಾಜ್ಯ ಸರ್ಕಾರದಿಂದ ಎರಡು ವರ್ಷದಲ್ಲಿ ಜನರಿಗೆ ಮೂಲ ಸೌಕರ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಮಾಡಲು ಸಾಧ್ಯವಾಗದೇ, ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಮಾತನಾಡಿ, ಗುಂಡಿ ಮುಚ್ಚಲು ಸಾಧ್ಯವಾಗದ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವೇ ಇಲ್ಲ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದು ಜನರನ್ನು ನರಕದ ಕೂಪಕ್ಕೆ ತಳ್ಳಿದ್ದಾರೆ. ಇದರಿಂದ ರಾಜ್ಯದ ಜನರು ಬೇಸತ್ತು ಸರ್ಕಾರದ ವಿರುದ್ಧ ಧಂಗೆ ಏಳಲು ಆರಂಭಿಸಿದ್ದಾರೆ. ಕಾಂಗ್ರೆಸ್ ಸರ್ವ ನಾಶವಾಗುವುದರಲ್ಲಿ ಸಂಶಯವಿಲ್ಲ. ಗುಂಡಿಬಿದ್ದ ರಸ್ತೆಗಳಲ್ಲಿ ಸಂಚರಿಸುವುದರಿಂದ ನಿತ್ಯವೂ ವಾಹನ ಸವಾರರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಆರೋಪಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಮನೋಜ್, ಕಮಲಮ್ಮ, ಮುಖಂಡರಾದ ಮನೋಜ್ ಹಳೆಕೋಟೆ, ವಿನಯ್ ಹಳೆಕೋಟೆ, ಪಂಚಾಕ್ಷರಿ, ಧನಿಕ್ ಕೋಡದಿಣ್ಣೆ, ಪ್ರಶಾಂತ್, ಸುನಿಲ್ ಮಣ್ಣಿಕೆರೆ, ಜಯಪಾಲ್, ಎಂ.ಎಸ್. ಸುಜಿತ್, ದಯಾಕರ್ ಬಾಳೆಹಳ್ಳಿ, ಸಚಿನ್ ಬಾನಳ್ಳಿ, ಪ್ರಕಾಶ್ ಕಿರುಗುಂದ, ಶಿವು ಕುನ್ನಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.