
ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದಲ್ಲಿ ಪದೇ ಪದೇ ಮೂಗು ತೂರಿಸುವ ಬಿಜೆಪಿಯು, ಕೇಂದ್ರದಲ್ಲಿ 11 ವರ್ಷದ ಆಡಳಿತ ವಿಫಲತೆಯನ್ನು ಬಿಜೆಪಿ ನಾಯಕರು ಏಕೆ ಪ್ರಶ್ನಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾಯಕತ್ವದ ಬಗ್ಗೆ ಯಾರೊಬ್ಬರು ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು, ಸಂಸದರು ಪಕ್ಷದ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಒಂದಿಬ್ಬರು ನಾಯಕತ್ವ ಬದಲಾವಣೆ ವಿಚಾರವನ್ನು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜಿವಾಲ ಅವರೊಂದಿಗೆ ಚರ್ಚಿಸಿದ್ದೇನೆ. ನಾಯಕತ್ವ ಬದಲಾವಣೆ ಬಗ್ಗೆ ಯಾರೊಬ್ಬರೂ ಅಪಸ್ವರ ಎತ್ತದಂತೆ ಹೈಕಮಾಂಡ್ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದೇನೆ' ಎಂದರು.
‘ಮೂಡಿಗೆರೆಯ ಮಹಾಗಣಪತಿ ಸಮಿತಿಯ ಆಹ್ವಾನದ ಮೇರೆಗೆ ಸಭೆಗೆ ಶಾಸಕಿ ನಯನಾ ಮೋಟಮ್ಮ ತೆರಳಿದ್ದರು. ಆ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ವಿಚಾರ ಶಾಸಕಿ ನಯನಾ ಅವರಿಗೆ ತಿಳಿದಿರಲಿಲ್ಲ. ಈ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ನಡೆದಿವೆ. ಶಾಸಕಿ ನಯನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಪ್ರಮೋದ್ ಮುತಾಲಿಕ್ ನಾಲಿಗೆ ಹರಿಯ ಬಿಡಲು ಸಾಧ್ಯವಾಗಲಿಲ್ಲ. ಶಾಸಕಿ ವಿರುದ್ಧ ಮಾತನಾಡುವವರು ಇದನ್ನು ಅರ್ಥಮಾಡಿಕೊಳ್ಳಬೇಕು’ ಎಂದು ಹೇಳಿದರು.
‘ನನ್ನ ಹಾಗೂ ಪುತ್ರಿಯ ರಾಜಕೀಯ ಜೀವನದಲ್ಲಿ ಯಾವ ಸಮುದಾಯವನ್ನು ವಿರೋಧಿಸಿಲ್ಲ. ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಇಟ್ಟುಕೊಂಡು ಮುನ್ನಡೆಯುತ್ತಿದ್ದೇವೆ. ಪ್ರಮೋದ್ ಮುತಾಲಿಕ್ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ' ಎಂದು ತಿಳಿಸಿದರು.
‘ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲೆಯಲ್ಲಿ ಸಿ.ಆರ್.ಸಗೀರ್ ಅಹ್ಮದ್, ಡಿ.ಬಿ.ಚಂದ್ರೇಗೌಡ, ನಾನು ಸೇರಿದಂತೆ ಮೂವರು ಸಚಿವರಾಗಿದ್ದೆವು. ನಂತರ ಬಂದ ಸರ್ಕಾರಗಳು ಜಿಲ್ಲೆಯ ಶಾಸಕರಿಗೆ ಒಂದೊಂದು ವರ್ಷ ಮಾತ್ರ ಸಚಿವ ಸ್ಥಾನ ದೊರಕಿದೆ. ಜಿಲ್ಲೆಗೆ ಸಚಿವ ಸ್ಥಾನ ಸಿಗದೆ 22 ವರ್ಷದಲ್ಲಿ 20 ವರ್ಷ ಹೊರಗಿನವರೆ ಉಸ್ತುವಾರಿ ಸಚಿವರಾಗಿದ್ದಾರೆ. ಈ ಬಾರಿ ಸಂಪುಟ ವಿಸ್ತರಣೆ ವೇಳೆ ಶಾಸಕಿ ನಯನಾ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಡ ಹಾಕುವುದಿಲ್ಲ. ಮಹಿಳಾ ಕೋಟದಲ್ಲಿ ನಯನಾ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಚುರುಕುಗೊಳ್ಳುವ ಜತೆಗೆ ಅಭಿವೃದ್ಧಿಗೆ ಸಹಕಾರ ಸಿಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಭರವಸೆಯಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.