
ಕಡೂರು: ಗೃಹ ಸಚಿವರಿಗೆ ಜಾತಿ ನಿಂದನೆ ಮಾಡಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಕೋಟ್ಯಾನ್ಗೆ ಜಾಮೀನು ಸಿಕ್ಕಿರುವುದು ನ್ಯಾಯಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಭರತ್ ಕೆಂಪರಾಜ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಾಗೃಹಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಂತೋಷ್ ಕೋಟ್ಯಾನ್ ಗೃಹಸಚಿವ ಜಿ.ಪರಮೇಶ್ವರ ಅವರನ್ನು ಟೀಕಿಸಿದ್ದರು. ಆದರೆ, ಜಾತಿ ನಿಂದನೆ ಮಾಡಿರಲಿಲ್ಲ. ಆದರೆ ಪೊಲೀಸರು ಸಂತೋಷ್ ಕೋಟ್ಯಾನ್ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸುಳ್ಳು ದೂರು ದಾಖಲಿಸಿಕೊಂಡು ಬಂಧಿಸಿದ್ದು ಸರಿಯಾದ ಕ್ರಮವಲ್ಲ. ವೈಯಕ್ತಿಕ ಟೀಕೆಗೆ ಕಾನೂನಿನ ಅಡಿ ಪ್ರಕರಣ ದಾಖಲಿಸಲು ಅವಕಾಶವಿದ್ದರೆ, ಪೊಲೀಸರು ಪ್ರಕರಣ ದಾಖಲಿಸಬಹುದಿತ್ತು. ಅದನ್ನು ಬಿಟ್ಟುಜಾತಿ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆಕಾಯ್ದೆಯಡಿ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ಸುಳ್ಳು ದೂರು ದಾಖಲಿಸಿ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕಬಹುದು ಎಂದು ಭಾವಿಸಿದ್ದರೆ ಅದು ಅವರ ತಪ್ಪು ಗ್ರಹಿಕೆ. ಇಂತಹ ಘಟನೆಗಳಿಂದ ಬಿಜೆಪಿ ಕಾರ್ಯಕರ್ತರು ಎದೆಗುಂದುವುದಿಲ್ಲ. ಬದಲಾಗಿ ಮತ್ತಷ್ಟು ಬಲಿಷ್ಠರಾಗುತ್ತಾರೆ ಎಂದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಅಜೇಯ್ ಒಡೆಯರ್,ಪ್ರಧಾನ ಕಾರ್ಯದರ್ಶಿ ಕುಮಾರ್, ಸೇತುರಾಮ್, ಆರ್.ಜಿ.ಕೊಪ್ಪಲು ಶಿವು, ಮತಿಘಟ್ಟ ನವೀನ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.