ADVERTISEMENT

ಪ್ರತ್ಯೇಕ ಸಮಿತಿ ರಚನೆ

ಪ್ರವಾಸೋದ್ಯಮ ಜಿಲ್ಲೆಯಾದ್ಯಂತ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 3:45 IST
Last Updated 24 ಜೂನ್ 2022, 3:45 IST

ಚಿಕ್ಕಮಗಳೂರು: ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ವಿವಿಧ ಸಂಸ್ಥೆ, ಪಾಲುದಾರರನ್ನು ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಈ ಸಮಿತಿಯಲ್ಲಿ ಪ್ರವಾಸೋದ್ಯಕ್ಕೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದಾರೆ. ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಹಾಗೂ ಅಭಿವೃದ್ಧಿಗಾಗಿ ಈ ಸಮಿತಿ ಕಾರ್ಯನಿರ್ವಹಿಸಲಿದೆ. ಪ್ರತಿ ತಿಂಗಳ ಮೂರನೇ ಶನಿವಾರ ಸಮಿತಿ ಸಭೆ ನಡೆಸಲಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲೆಯ ಕೆಲವೇ ಸ್ಥಳಗಳಿಗೆ ಪ್ರವಾಸಿಗರು ಸೀಮಿತವಾಗಿರುವುದನ್ನು ತಪ್ಪಿಸಲು, ಜಿಲ್ಲೆಯ ವಿವಿಧ ಭಾಗಗಳಲ್ಲಿರುವ ಪ್ರಾಕೃತಿಕ, ಪಾರಂಪರಿಕ ಮತ್ತು ಐತಿಹಾಸಿಕ ಸ್ಥಳಗಳನ್ನು ಸಮಗ್ರವಾಗಿ ಗುರುತಿಸಿ, ಅಭಿವೃದ್ಧಿಪಡಿಸಲಾಗುವುದು. ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಇನ್ನಷ್ಟು ವಿಸ್ತಾರವಾಗಲಿದೆ ಎಂದರು.

ಜಿಲ್ಲೆಯಲ್ಲಿರುವ ಹೋಟೆಲ್, ವಸತಿ ಗೃಹ, ಹೋಂ ಸ್ಟೇ, ರೆಸಾರ್ಟ್, ಟ್ಯಾಕ್ಸಿ, ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರದಲ್ಲಿರುವವವರನ್ನು ಒಂದೇ ವೇದಿಕೆಗೆ ತಂದು ಅವರಿಗೆ ಜಿಲ್ಲೆಯ ಪ್ರವಾಸೋದ್ಯಮದ ಸಮಗ್ರ ಮಾಹಿತಿ ನೀಡಿ ಭಾಗೀದಾರರನ್ನಾಗಿ ಮಾಡಲಾಗುವುದು, ಪ್ರವಾಸಿ ಗೈಡಗಳಿಗೆ ತರಬೇತಿ ನೀಡಿ, ಪ್ರವಾಸಿಗರಿಗೆ ಸಮರ್ಪಕ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರವಾಸೋದ್ಯಮ ಉತ್ತೇಜನಕ್ಕೆ ಜೂನ್ 25 ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ನಾಟಕ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಹೋಂ ಸ್ಟೇ, ರೆಸಾರ್ಟ್ ನಿಯಂತ್ರಣ: ಜಿಲ್ಲೆಯಲ್ಲಿರುವ ಎಲ್ಲ ಹೋಂಸ್ಟೆ, ರೆಸಾರ್ಟ್‌ಗಳ, ವಸತಿ ಗೃಹಗಳ ಸಮಗ್ರ ಮಾಹಿತಿ ಹಾಗೂ ಅವುಗಳ ನೋಂದಣಿಗೆ ಪ್ರತ್ಯೇಕ ಪೋರ್ಟಲ್ ರಚಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪ್ರವಾಸಿ ತಾಣಕ್ಕೆ ಯೋಜನೆ ರೂಪಿಸಲಾಗುವುದು. ಅಲ್ಲಿನ ನಿರ್ವಹಣೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.