ADVERTISEMENT

ಓಮ್ನಿ, ಇನೊವಾ ಡಿಕ್ಕಿ: ಅಪಾಯದಿಂದ ಪಾರಾದ ಮಕ್ಕಳು

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 4:51 IST
Last Updated 15 ಜೂನ್ 2022, 4:51 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಓಮಿನಿ ಕಾರು
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಓಮಿನಿ ಕಾರು   

ಶೃಂಗೇರಿ: ಮೆಣಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೃಂಗೇರಿ ಚಿಕ್ಕಮಗಳೂರು ರಸ್ತೆಯ ಶಿಡ್ಲೆ ಗಣಪತಿ ದೇವಸ್ಥಾನದ ಬಳಿ ಶಾಲಾ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಓಮ್ನಿ ಕಾರು ಮತ್ತು ಇನೊವಾ ನಡುವೆ ಅಪಘಾತ ಸಂಭವಿಸಿ, ಶಾಲಾ ಮಕ್ಕಳಿದ್ದ ಓಮ್ನಿ ಕಾರು ಪಲ್ಟಿಯಾಗಿ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್‌ ಮಕ್ಕಳಿಗೆ ಯಾವುದೇ ಅಪಾಯವಾಗದೆ ಪಾರಾಗಿದ್ದಾರೆ. ಶೃಂಗೇರಿಯ ಎರಡು ಖಾಸಗಿ ಶಾಲೆಗಳ ಮಕ್ಕಳು ವಾಹನದಲ್ಲಿ ಇದ್ದರು.

‘ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈ ಹಿಂದೆಯೇ ಆರ್.ಟಿ.ಓ. ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಶೃಂಗೇರಿಯ ಇನ್‍ಸ್ಪೆಕ್ಟರ್ ಮತ್ತು ಆರ್.ಟಿ.ಓ ಅಧಿಕಾರಿಗಳು ಇದರ ಕುರಿತು ಕ್ರಮ ಕೈಗೊಳ್ಳಬೇಕು. ಪೋಷಕರು ಕೂಡ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದಾಗಿ ಹಳದಿ ಬೋರ್ಡ್ ವಾಹನಗಳ ದಾಖಲಾತಿ ಪರಿಶೀಲನೆ ನಡೆಸಿ ಅವರನ್ನು ಕಳುಹಿಸಬೇಕು’ ಎಂದು ಶೃಂಗೇರಿ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ದಿನೇಶ್ ಹೊಲ್ಮ ಒತ್ತಾಯಿಸಿದರು.

‘ತಾಲ್ಲೂಕಿನ ಎಲ್ಲಾ ಗ್ರಾಮೀಣ ಭಾಗದಿಂದ ಮಕ್ಕಳು ಶಾಲಾ ಕಾಲೇಜುಗಳಿಗೆ ಓಡಾಡಲು ಬಸ್ ವ್ಯವಸ್ಥೆ ಇಲ್ಲದೇ ಇರುವುದರಿಂದ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಖಾಸಗಿ ವಾಹನವನ್ನು ಅವಲಂಬಿಸಿದ್ದಾರೆ. ಈ ಸಮಸ್ಯೆ ಕುರಿತು ಹಲವು ಬಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಗ್ರಾಮೀಣ ಭಾಗಗಳಿಗೆ ಬಸ್ ಸಂಪರ್ಕ ಕಲ್ಪಿಸಬೇಕು’ ಎಂದು ಕುತೂಗೋಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರ್ ಭಟ್ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.