ADVERTISEMENT

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 5:31 IST
Last Updated 3 ಆಗಸ್ಟ್ 2025, 5:31 IST
ತಾ.ಪಂ.ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ತಮ್ಮಯ್ಯ ಸಮವಸ್ತ್ರ ವಿತರಿಸಿದರು.
ತಾ.ಪಂ.ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ತಮ್ಮಯ್ಯ ಸಮವಸ್ತ್ರ ವಿತರಿಸಿದರು.   

ಚಿಕ್ಕಮಗಳೂರು: ‘ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಶನಿವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಯೋಜನೆಯಡಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ 40 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು, ಈ ಅಂಗನವಾಡಿ ಕೇಂದ್ರಗಳಿಗೆ ಟಿವಿ, ಪೆನ್‌ಡ್ರೈವ್, ಸ್ಟೆಬಿಲೈಜರ್ ವಿತರಣೆ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಕ್ಕೆ ಬರುವ 3-6 ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.

ADVERTISEMENT

ಪ್ರತಿ ವರ್ಷದಂತೆ ತಾಲ್ಲೂಕಿನ 407 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮಾಡಿದ ಅವರು, ಜತೆಗೆ ಇತರ ಪರಿಕರಗಳನ್ನು ನೀಡಲಾಗುವುದು. ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಎರಡು ಸಮವಸ್ತ್ರದ ಸೀರೆಗಳನ್ನು ವಿತರಿಸಲಾಗುವುದು ಎಂದರು.

ಅ.2ಕ್ಕೆ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಿ 50 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ತಾಲ್ಲೂಕಿನ 47 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದರು.

ಈ ಸಂಬಂಧ ಈಗಾಗಲೇ ಪಠ್ಯಪುಸ್ತಕಗಳು ಸರಬರಾಜಾಗುತ್ತಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುವುದು. 4-5 ವರ್ಷದ ಮಕ್ಕಳಿಗೆ ಎಲ್‌ಕೆಜಿ, 5-6 ವರ್ಷದ ಮಕ್ಕಳಿಗೆ ಯುಕೆಜಿ ತರಗತಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದೆಂದು ಮಾಹಿತಿ ನೀಡಿದರು.

ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮೆಡಿಷನ್ ಕಿಟ್ ಸರಬರಾಜು ಮಾಡಲಾಗಿದ್ದು, ಅಂಗನವಾಡಿ ಫಲಾನುಭವಿಗಳಿಗೆ ಈ ಕಿಟ್‌ ಅನ್ನು ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಮಾತನಾಡಿ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಂತ ಹಂತವಾಗಿ ಇಂಗ್ಲಿಷ್‌ ಮಾಧ್ಯಮದಲ್ಲಿ ಎಲ್‌ಕೆಜಿ, ಯುಕೆಜಿ ವಿನೂತನ ತರಗತಿಗಳನ್ನು ಅಕ್ಟೋಬರ್‌ 2 ರಂದು ವಿದ್ಯುಕ್ತವಾಗಿ ಆರಂಭಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಣಕ್ಕೆ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ವಿಜಯ್‌ಕುಮಾರ್, ಎಸಿಡಿಪಿಒ ರೂಪಾ ಕುಮಾರಿ, ವಸಂತ ಕುಮಾರಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.