ADVERTISEMENT

ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಮೈಗೂಡಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2018, 16:24 IST
Last Updated 8 ಡಿಸೆಂಬರ್ 2018, 16:24 IST
ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ನಂದಕುಮಾರ್ ಇದ್ದಾರೆ.
ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ನಂದಕುಮಾರ್ ಇದ್ದಾರೆ.   

ಚಿಕ್ಕಮಗಳೂರು: ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯ ಮೈಗೂಡಿಸಬೇಕು ಎಂದು ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ ಸಲಹೆ ನೀಡಿದರು.

ನಗರದ ಕುವೆಂಪು ಕಲಾ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಹಳೇಉಪ್ಪಳ್ಳಿಯ ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶೈಕ್ಷಣಿಕ, ಸಾಮಾಜಿಕ ಮತ್ತು ವೈಜ್ಞಾನಿಕವಾಗಿ ದೇಶ ಇಂದು ಬಹಳಷ್ಟು ಮುಂದುವರಿದಿದೆ. ಆದರೆ, ಎಲ್ಲೆಡೆ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಅದರಿಂದ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸಾಮರಸ್ಯ ಮರೆಯಾಗುತ್ತಿದೆ ಎಂದು ವಿಷಾದಿಸಿದರು.

ADVERTISEMENT

ವಿದ್ಯಾರ್ಥಿಗಳು ಯೋಗ, ಧ್ಯಾನ ಅಭ್ಯಸಿಸಬೇಕು. ಸಂಗೀತ, ಕ್ರೀಡೆ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಆತ್ಮಬಲ ಹೆಚ್ಚಿಸಿಕೊಳ್ಳಬೇಕು ಎಂದರು.

ಪ್ರಾಚಾರ್ಯೆ ಎಚ್.ಪಾಲಾಕ್ಷಮ್ಮ ಮಾತನಾಡಿ, ವಿದ್ಯಾರ್ಥಿಗಳನ್ನು ಶಿಕ್ಷಣವಂತರನ್ನಾಗಿಸುವುದರ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸುವ ಕೆಲಸವನ್ನೂ ಶಾಲೆ ಮಾಡುತ್ತಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಶಿಕ್ಷಕಿಯರಾದ ಆಜ್ರಾ ಮತ್ತು ಸಂಗೀತ, ಗೀತಾ ಕಾರ್ಯಕ್ರಮ ನಿರೂಪಿಸಿದರು.

ಮುಖಂಡ ಯು.ಎಚ್.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಖಾಸಗಿ ಶಾಲೆಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಉಮಾಶಂಕರ್, ರೇಣುಕಾಚಾರ್ಯ ಟ್ರಸ್ಟ್‌ನ ಖಜಾಂಚಿ ಯು.ಎಂ.ಬಸವ ರಾಜ್, ಬಿ.ಎಂ.ನೀಲ ಕಂಠಪ್ಪ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಘ್ನೇಶ್, ರಾಜಯೋಗಿನಿ ಬಿ.ಕೆ.ಪ್ರೇಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.