ADVERTISEMENT

ಸರ್ಕಾರದಿಂದ ಸೇವಾ ಭದ್ರತೆ ಅಗತ್ಯ

ಮೂಡಿಗೆರೆ: ಅಂಗವಿಕಲರ ದಿನಾಚರಣೆಯಲ್ಲಿ ಶಾಸಕ ಕುಮಾರಸ್ವಾಮಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2018, 16:28 IST
Last Updated 8 ಡಿಸೆಂಬರ್ 2018, 16:28 IST
ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿಕಲಚೇತನರನ್ನುಸನ್ಮಾನಿಸಲಾಯಿತು.
ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿಕಲಚೇತನರನ್ನುಸನ್ಮಾನಿಸಲಾಯಿತು.   

ಮೂಡಿಗೆರೆ: ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಶನಿವಾರ ವಿಶ್ವ ಅಂಗವಿಕಲರ ದಿನವನ್ನು ಆಚರಿಸಲಾಯಿತು. ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ನೇತೃತ್ವದಲ್ಲಿ, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ, ತಾಲ್ಲೂಕಿನಾದ್ಯಂತ ಇರುವ ನೂರಾರು ಅಂಗವಿಕಲರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ರೀಡೆಗಳನ್ನು ನಡೆಸಲಾಯಿತು. ಮೈ ಚಳಿ ಬಿಟ್ಟು ಕ್ರೀಡಾಕೂಟದಲ್ಲಿ ಪಾಲ್ಗೊಂಡ ಅಂಗವಿಕಲರು ಗೆಲುವಿವಾಗಿ ಗುರಿಯೆಡೆಗೆ ಸಾಗಿದ ಪರಿಯು ನೆರೆದವರನ್ನು ಬೆರಗುಗೊಳಿಸುವಂತಿತ್ತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ‘ಅಂಗವಿಕಲರು ಛಲಗಾರರು. ಸಾಮಾಜಿಕ ಜೀವನದಲ್ಲಿ ಸುಮ್ಮನಿರದೇ ತಮ್ಮ ಜೀವನಕ್ಕಾಗಿ ದುಡಿಯುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರಿಗೆ ಸರ್ಕಾರ ಸೇವಾ ಭದ್ರತೆ ಒದಗಿಸುವ ಅಗತ್ಯವಿದೆ. ದೇಶದ ಸಂವಿಧಾನದಲ್ಲಿ ಎಲ್ಲಾ ರಂಗದಲ್ಲಿ ದುಡಿಯಲು ಸಮಾನ ಅವಕಾಶವಿದೆ. ಅದನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ.ರತನ್ ಮಾತನಾಡಿ, ‘ಅಂಗವಿಕಲರಿಗೆ ಜೀವನ ಭದ್ರತೆ ಒದಗಿಸಲು ತಾಲ್ಲೂಕು ಆಡಳಿತ ಸಿದ್ಧವಿದೆ. ಅಧಿಕಾರಿಗಳು ಅವರಿಗೆ ಯಾವುದೇ ಸಬೂಬು ಹೇಳದೇ, ತೊಂದರೆ ನೀಡದೇ ಸರ್ಕಾರಿ ಸೌಲಭ್ಯವನ್ನು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅರ್ಹರಿಗೆ ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ’ ಎಂದರು.

ಕ್ರೀಡಾಕೂಟವನ್ನು ನ್ಯಾಯಾಧೀಶೆ ಪ್ರಕೃತಿ ಕಲ್ಯಾಣ್‍ಪುರ ಉದ್ಘಾಟಿಸಿದರು. ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗವಿಕಲರಿಗೆ ಹಾಗೂ ಅವರಿಗೆ ನಿರಂತರ ಸಹಕಾರ ನೀಡುತ್ತಿರುವ 6 ಮಂದಿಯನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯೆ ಸುಧಾ ಯೋಗೇಶ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ದೇವರಾಜು, ವೀಣಾ ಉಮೇಶ್, ಪ್ರಮೀಳಾ, ಬಿದರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜಯ್ಯ, ಶಿಶು ಅಭಿವೃದ್ಧಿ ಅಧಿಕಾರಿ ಭಾರತಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರನಾಥ್, ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಣ್ಣೇಗೌಡ, ರೋಟರಿ ಸಂಸ್ಥೆ ಅಧ್ಯಕ್ಷ ವಿನೋದ್ ಶೆಟ್ಟಿ, ಲಯನ್ಸ್ ಸಂಸ್ಥೆಯ ಬಿ.ಕೆ.ಲಕ್ಷ್ಮಣ್‍ಗೌಡ, ಶಿಕ್ಷಣ ಸಮನ್ವಯಾಧಿಕಾರಿ ಶಿವನಂಜೇಗೌಡ, ಉಪ ತಹಸೀಲ್ದಾರ್ ಮಂಜುನಾಥ್, ಸಂಚಿ ಹೊನ್ನಮ್ಮ ಮಹಿಳಾ ಸಂಘದ ಅಧ್ಯಕ್ಷೆ ಕಮಲಾಕ್ಷಿ, ಕಾರ್ಯದರ್ಶಿ ಭಾನುಮತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.